ಇನ್ನೂ 20 ಶಾಸಕರು ಪಕ್ಷ ಸೇರಲಿದ್ದಾರೆ-ಪರಮೇಶ್ವರ್

ಪಕ್ಷದ ಸಂಘಟನೆ ದೃಷ್ಟಿಯಿಂದ ಯಾರು ಬಂದರೂ ಸ್ವಾಗತ. ಕಾಂಗ್ರೆಸ್ ನ ತತ್ವ, ಸಿದ್ಧಾಂತ ಮೆಚ್ಚಿ ಹಲವರು ಪಕ್ಷಕ್ಕೆ ಬರುತ್ತಿದ್ದಾರೆ. ಜೆಡಿಎಸ್ ಮತ್ತು ಬಿಜೆಪಿಯ 20 ಶಾಸಕರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ನಂತರ ಕಾಂಗ್ರೆಸ್ ಸೇರಲಿದ್ದಾರೆ. ಅವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಯಾವ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಶಾಸಕರ ಸೇರ್ಪಡೆಯಿಂದ ಕಾಂಗ್ರೆಸ್ ಬಲ ಹೆಚ್ಚಲಿದೆ, ಇದರಿಂದ ಈ ಬಾರಿಯ ಚುನಾಣೆ ಗೆಲ್ಲಲು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ಮತ್ತಷ್ಟು ವಲಸಿಗರ ಸೇರ್ಪಡೆಯಿಂದ ಮೂಲ ಕಾಂಗ್ರೆಸಿಗರ ಸಿಟ್ಟು ಹೆಚ್ಚಾಗುವ ಸಂಭವವಿದೆ. ಪ್ರಾದೇಶಿಕ ಪಕ್ಷಗಳ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಮಾತ್ರ ಎದುರಾಳಿ, ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಗೆ ಯಾವುದೇ ಸ್ಪರ್ಧೆ ನೀಡಲಾರವು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬಿದರಿ ಬಂದರೆ ಸ್ವಾಗತ : ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಕಾಂಗ್ರೆಸ್ ಸೇರಲಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಶಂಕರ ಬಿದರಿ ಪಕ್ಷಕ್ಕೆ ಸೇರ್ಪಡೆಯಾಗುವ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಕಾಂಗ್ರೆಸ್ ಸೇರುವುದು ಅವರ ಆಯ್ಕೆಗೆ ಬಿಟ್ಟ ವಿಚಾರ. ಪಕ್ಷಕ್ಕೆ ಸೇರ್ಪಡೆಗೊಂಡರೆ ಅದನ್ನು ಸ್ವಾಗತಿಸುತ್ತೇನೆ ಎಂದರು.
ಎರಡು ದಿನದಲ್ಲಿ ಪ್ರಣಾಳಿಕೆ ಬಿಡುಗಡೆ : ಸ್ಥಳೀಯ ಸಂಸ್ಥೆಗಳ ಚುನಾವಣೆಯ ಪ್ರಣಾಳಿಕೆ ತಯಾರಾಗಿದೆ. ಎರಡು ದಿನಗಳಲ್ಲಿ ಅದನ್ನು ಬಿಡುಗಡೆ ಮಾಡಲಾಗುವುದು. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.












Click it and Unblock the Notifications