ಚುನಾವಣೆ ತಯಾರಿ - ಶಾಸಕರಾಗಲು ಹೊರಟ ಸಂಸದರು
ಕೆಲವು ಪಕ್ಷಗಳು ಈ ಅಭ್ಯರ್ಥಿಗಳಿಗೆ ಈ ಕ್ಷೇತ್ರದಲ್ಲಿ ಟಿಕೆಟ್ ನೀಡುವುದು ಖಂಡಿತ ಎಂದು ಘೋಷಿಸಿವೆ. ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆಯುತ್ತಿದೆ 5 ಕ್ಕೂ ಹೆಚ್ಚು ವಿವಿಧ ಪಕ್ಷಗಳ ಸಂಸದರು ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.
ಸಂಸದರಾಗಿ ಆಯ್ಕೆಯಾದರೂ ಕ್ಷೇತ್ರದ ಜನರ ಮೇಲಿನ ಕಾಳಜಿ, ರಾಜ್ಯದ ಮೇಲಿನ ಅಭಿಮಾನ, ಕಾರ್ಯಕರ್ತರ ಒತ್ತಡ ಮುಂತಾದ ಕಾರಣಗಳಿಗಾಗಿ ಈ ಸಂಸದರು ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತಯಾರಿ ಆರಂಭಿಸಿದ್ದಾರೆ. ಕೆಲವರು ಪಕ್ಷದ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಕೆಲವರು ನಾಯಕರ ಅನುಮತಿಗಾಗಿ ಎದುರು ನೋಡುತ್ತಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ಸಂಸದರಾದ ಎಚ್.ಡಿ.ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಅಥವ ಚನ್ನಪಟ್ಟಣದಿಂದ ವಿಧಾನಸಭೆಗೆ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಇವರು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಕ್ರಿಯರಾಗಿದ್ದು, ವಿಧಾನಸಭೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಜೆಡಿಎಸ್ ಪಕ್ಷದ ಇನ್ನೊಬ್ಬ ನಾಯಕ ಮಂಡ್ಯ ಜಿಲ್ಲೆಯ ಸಂಸದ ಎನ್.ಚೆಲುವರಾಯಸ್ವಾಮಿ ಸಹ ಮುಂಬರುವ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ ಎನ್ನುತ್ತಿವೆ ಮೂಲಗಳು. ಸದ್ಯ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸುರೇಶ್ ಗೌಡ ಶಾಸಕರು.
ಕಾಂಗ್ರೆಸ್ ಪಕ್ಷದ ಮೈಸೂರು ಜಿಲ್ಲೆ ಸಂಸದ ಮಾಜಿ ಸಚಿವ ಎಚ್.ವಿಶ್ವನಾಥ್ ಸಹ ವಿಧಾನಸಭೆ ಚುನಾವಣೆಗೆ ಕೆ.ಆರ್.ನಗರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹಾಲಿ ಕೆ.ಆರ್.ನಗರ ಜೆಡಿಎಸ್ ವಶದಲ್ಲಿದ್ದು, ಎಸ್.ಆರ್.ಮಹೇಶ್ ಶಾಸಕರಾಗಿದ್ದಾರೆ.
ನೂತನವಾಗಿ ಸ್ಥಾಪಿತವಾಗಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷದಿಂದ ಬಿಜೆಪಿಯ ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ ಎನ್ನುತ್ತಿವೆ ಮೂಲಗಳು. ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ರಾಘವೇಂದ್ರ ಸ್ಪರ್ಧಿಸಲಿದ್ದಾರೆ.
ಇನ್ನು ರಾಜ್ಯದ ಆಡಳಿತಾರೂಢ ಬಿಜೆಪಿಯಿಂದ ವಿಧಾನಸಭೆಗೆ ಚುನಾವಣೆಗೆ ಟಿಕೆಟ್ ನೀಡುವಂತೆ ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಮತ್ತು ಪಿ.ಸಿ.ಮೋಹನ್ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಚುಣಾವಣೆ ಘೋಷಣೆಯಾದ ನಂತರ ವಿವಿಧ ಪಕ್ಷಗಳ ಇನ್ನು ಕೆಲವು ಸಂಸದರು ವಿಧಾನಸಭೆ ಟಿಕೆಟ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಸಂಸದರಿಗೆ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲವೆಂದು ಸ್ಪಷ್ಟ ಪಡಿಸಿದ್ದರೂ, ಚುನಾವಣಾ ಲೆಕ್ಕಾಚಾರಗಳೇ ಬೇರೆಯಾಗಿರುತ್ತವೆ. ಉಳಿದಂತೆ ಬಿಜೆಪಿ ಮತ್ತು ಜೆಡಿಎಸ್ ಸಂಸದರಿಗೆ ವಿಧಾನಸಭೆ ಟಿಕೆಟ್ ನೀಡುವ ಬಗ್ಗೆ ಇನ್ನು ಮೌನ ವಹಿಸಿವೆ.