ನಗರಕ್ಕೆ ನೀರಿನ ಕೊರತೆ ಇಲ್ಲ-ಸುರೇಶ್ ಕುಮಾರ್
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸೋಮವಾರ ಉನ್ನತ ಮಟ್ಟದ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು, ನೀರಿನ ಕೊರತೆ ತಪ್ಪಿಸಲು ಶಿವಾ, ಶಿಂಷಾ, ಸತ್ಯಗಾಲ ಅಣೆಕಟ್ಟು, ಮತ್ತು ಮಾಧವ ಮಂತ್ರಿ ಬ್ಯಾರೇಜ್ ಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗುವುದು ಎಂದರು.
ಈ ಎಲ್ಲಾ ಕೇಂದ್ರಗಳಲ್ಲಿ ಉತ್ಪಾದನೆಯಾಗುತ್ತಿದ್ದ ವಿದ್ಯುತ್, ರಾಜ್ಯದ ಒಟ್ಟಾರೆ ಉತ್ಪಾದನೆಯ ಶೇ.1ಕ್ಕಿಂತಲೂ ಕಡಿಮೆ ಇದೆ. ತಾತ್ಕಾಲಿಕವಾಗಿ ವಿದ್ಯುತ್ ಉತ್ಪಾದನೆ ನಿಲ್ಲಿಸಿದರೆ ವಿದ್ಯುತ್ ಕೊರತೆ ಉಂಟಾಗುವುದಿಲ್ಲ. ಇದರಿಂದಾಗಿ 50 ಕ್ಯುಸೆಕ್ಸ್ ನೀರು ಉಳಿತಾಯವಾಗಲಿದೆ ಎಂದು ಹೇಳಿದರು.
ಶಿವಾ ಅಣೆಕಟ್ಟೆಯಿಂದ ನಗರಕ್ಕೆ ಹರಿದು ಬರು ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಾವೇರಿ ನೀರಾವರಿ ನಿಗಮ, ಮೈಸೂರು ಮತ್ತು ಮಂಡ್ಯ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕಾವಲು ಸಮಿತಿ ರಚನೆ : ಬೆಂಗಳೂರು ನಗರಕ್ಕೆ ಪೂರೈಕೆಯಾಗುವ ನೀರನ್ನು ನದಿ ಪಾತ್ರದಲ್ಲಿ ಅಕ್ರಮವಾಗಿ ಬಳಸದಂತೆ ತಡೆಯಲು ಕಾವಲು ಸಮಿತಿ ರಚಿಸಲಾಗುವುದು ಎಂದು ತಿಳಸಿದರು.
ಬೆಂಗಳೂರು ಜಲಮಂಡಳಿ, ಕಾವೇರಿ ನೀರಾವರಿ ನಿಗಮ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಅಧಿಕಾರಿಗಳು ಸಮಿತಿಯಲ್ಲಿರುತ್ತಾರೆ ಎಂದು ತಿಳಿಸಿದರು. ಮೇ ಅಂತ್ಯದ ವೇಳೆಗೆ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರಿನ ನಾಗರೀಕರಿಗೆ ನೀರಿನ ಕೊರತೆ ಉಂಟಾಗದಂತೆ ತಡೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ನಾಗರೀಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.