ಕಳಂಕಿತ ನಾಯಕರಿಗೆ 'ಕೈ' ಟಿಕೆಟ್ ಇಲ್ಲ : ಸಿಂಘ್ವಿ
ಬೆಂಗಳೂರಿನ ಕೆಪಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಆರೋಪ ಪಟ್ಟಿ ದಾಖಲಾಗಿರುವ ಶಾಸಕರು ಮತ್ತು ನಾಯಕರಿಗೆ ಈ ಬಾರಿ ಟಿಕೆಟ್ ನೀಡಬಾರದು ಎಂದು ಹೈಕಮಾಂಡ್ ನಾಯಕರ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಖಚಿತ. ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಾಗದ ಬಿಜೆಪಿ ಯಡಿಯೂರಪ್ಪ ನೇತೃತ್ವದ ಕೆಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಮೌಲ್ಯ ಮತ್ತು ಜನಪರ ಕಾಳಜಿಯ ಬಗ್ಗೆ ಮಾತನಾಡುವ ಬಿಜೆಪಿ ಪಕ್ಷದ ಬಣ್ಣ ಮುಂದಿನ ಚುನಾವಣೆಯಲ್ಲಿ ಬಯಲಾಗಲಿದೆ. ಬಿಜೆಪಿ ತೊರೆದು ಕೆಜೆಪಿ ಪಕ್ಷ ಕಟ್ಟಿದ ಬಿ.ಎಸ್.ಯಡಿಯೂರಪ್ಪ ಬಿಜೆಪಿಯೊಂದಿಗೆ ಡೈವೋರ್ಸ್ ಪಡೆದರು ಲೀವಿಂಗ್ ಟುಗೆದರ್ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಟಿಕೆಟ್ ವಂಚಿತರಾಗುವ ಸಾಂಭವ್ಯರು : ಕೆಪಿಸಿಸಿ ಉನ್ನತ ಮೂಲಗಳ ಮಾಹಿತಿ ಪ್ರಕಾರ ಕ್ರಿಮಿನಲ್ ಪ್ರಕರಣಗಳು ದಾಖಲಾದ 11 ಶಾಸಕರಿಗೆ ಟಿಕೆಟ್ ನೀಡದಿರಲು ಕಾಂಗ್ರೆಸ್ ನಿರ್ಧರಿಸಿದೆ. ದೇವನಹಳ್ಳಿ ಕ್ಷೇತ್ರದ ವೆಂಕಟ ಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಎಂ.ಸತ್ಯನಾರಾಯಣ, ಚಿಂತಾಮಣಿಯ ಡಾ.ಸುಧಾಕರ್, ಎಚ್.ಡಿ.ಕೋಟೆಯ ಚಿಕ್ಕಣ್ಣ ಮುಂತಾದವರಿಗೆ ಟಿಕೆಟ್ ಕೈ ತಪ್ಪುವ ಸಂಭವವಿದೆ.
ಕೇಂದ್ರ ಸಚಿವರ ಜೊತೆ ಚರ್ಚಿಸಿ ಕಳಂಕಿತರಿಗೆ ಟಿಕೆಟ್ ನೀಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಮಾ.16 ಮತ್ತು 17ರಂದು ನಡೆಯಲಿರುವ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ.
ಎಫ್ಐಆರ್ ಬುಕ್ ಲೆಟ್ ಬಿಡುಗಡೆ : ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ್ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಸಚಿವರು, ಶಾಸಕರ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳ ಕುರಿತು ಎಫ್ಐಆರ್ ಬುಕ್ ಲೆಟ್ ಹೊರತರಲಾಗುವುದು ಎಂದು ಅವರು ತಿಳಿಸಿದರು.
ಒಟ್ಟಾರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್ ವಿಧಾನಸಭೆ ಚುನಾವಣೆಯ ತಯಾರಿ ಆರಂಭಿಸಿದೆ. ಈ ಬಾರಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಚುನಾವಣೆ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿರುವುದಂತು ಸತ್ಯ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ