ಕೆಜೆಪಿ ಸೇರುವ ನಾಯಕರಿಗೆ ನಿರಾಣಿ ಸಾರಥ್ಯ
ಮಂಗಳವಾರ ರಾತ್ರಿ ಸಚಿವ ಮುರುಗೇಶ್ ನಿರಾಣಿ, ಕೆಜೆಪಿ ಸೇರುವ ಪಟ್ಟಿಯಲ್ಲಿರುವ ಸಚಿವ ಬಸವರಾಜ್ ಬೊಮ್ಮಾಯಿ, ಉಮೇಶ್ ಕತ್ತಿ, ಸಂಸದ ಪ್ರಭಾಕರ ಕೋರೆ, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ನರಗುಂದ ಶಾಸಕ ಸಿ.ಸಿ.ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಸಭೆಯಲ್ಲಿ ಭಾಗವಹಿಸಿದ ನಾಯಕರು ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದು, ಮುಂದಿನ ವಾರದಲ್ಲಿ ಕೆಜೆಪಿ ಸೇರುವ ನಿರ್ಣಯ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಚಿವರ ಆಪ್ತರು ಹೇಳಿದ್ದಾರೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ಸಚಿವ ಸಂಪುಟದಲ್ಲೂ ಅಸಮಾಧಾನದ ಹೊಗೆಯಾಗುಡುತ್ತಿದ್ದು, ಉತ್ತರ ಕರ್ನಾಟಕ ಭಾಗದ ಶಾಸಕರು ಮತ್ತು ಸಚಿವರಿಗೆ ಸೂಕ್ತ ಪ್ರಾತಿನಿಧ್ಯ ದೊರಕುತ್ತಿಲ್ಲ ಎಂಬ ಕೂಗು ಕೇಳಿ ಬರತೊಡಗಿದೆ.
ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಅನಂತ ಕುಮಾರ್ ಪಕ್ಷದ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿದ್ದು ಶಾಸಕರು ಮತ್ತು ಸಚಿವರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂದು ಕೆಲವು ನಾಯಕರು ಆರೋಪಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಹ ದೆಹಲಿಗೆ ತೆರಳಿದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರವು ಉತ್ಸಾಹದಲ್ಲಿರುವ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ ರವಾನೆಯಾಗುವ ಸಂಭವವಿದೆ. ಕೆಜೆಪಿ, ಕಾಂಗ್ರೆಸ್ ಎಂದು ಶಾಸಕರು ಪಕ್ಷಾಂತರ ಮಾಡಿದರೆ ಬಿಜೆಪಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ