ದೆಹಲಿಯಲ್ಲಿ ಕೈ ಹಿಡಿದ ಶಂಕರ ಬಿದರಿ
ದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬಿದರಿ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡೀಸ್ ಪಕ್ಷಕ್ಕೆ ಬರಮಾಡಿಕೊಂಡರು. ಸಾಮಾನ್ಯ ಕಾರ್ಯರ್ತರಾಗಿ ಕೆಲಸ ಮಾಡಲು ಶಂಕರ ಬಿದರಿ ಪ್ಷಕಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಅವರು ಹೇಳಿದರು.
ಆದರೆ, ಗುರುವಾರ ಕಾಂಗ್ರೆಸ್ ಹೈ ಕಮಾಂಡ್ ಶಂಕರ ಬಿದರಿ ಅವರಿಗೆ ತೆರದಾಳ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲು ಅಸ್ತು ಎಂದಿದೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಬಹಳ ದಿನಗಳಿಂದ ರಾಷ್ಟ್ರೀಯ ಪಕ್ಷ ಸೇರುತ್ತೇನೆ ಎನ್ನುತ್ತಿದ್ದ ಶಂಕರ ಬಿದರಿ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಮೂರು ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ರಾಹುಲ್ ಗೆ ಸೋಲು : ಈ ಬಾರಿಯ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಲು ಯುವಕರಿಗೆ ಮಾತ್ರ ಆದ್ಯತೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಿದರಿ ಸೇರ್ಪಡೆಯಿಂದ ದೊಡ್ಡ ಹಿನ್ನಡೆ ಉಂಟಾಗಿದೆ.
ಎರಡು ಬಾರಿ ಸೋತ ಶಾಸಕರಿಗೆ, ಮಾಜಿ ಸರ್ಕಾರಿ ಅಧಿಕಾರಿಗಳಿಗೆ ವಿಧಾನಸಭೆ ಟಿಕೆಟ್ ನೀಡುವುದಕ್ಕೆ ದೆಹಲಿ ಮತ್ತು ರಾಜ್ಯ ಕಾಂಗ್ರೆಸಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಕೇಂದ್ರ ಸಚಿವರ ಪ್ರಭಾವ ಬಳಸಿ ಶಂಕರ ಬಿದರಿ ಟಿಕೆಟ್ ಪಡೆದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಕೇಂದ್ರ ನಾಯಕರ ಜೊತೆ ಮಾತುಕತೆ ನಡೆಸಿ ಬಿದರಿ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಚಿತ್ರನಟಿ, ಹಿರಿಯ ಕಾಂಗ್ರೆಸ್ ನಾಯಕಿ ಉಮಾಶ್ರೀ ಇತ್ತೀಚೆಗೆ ತೆರೆದಾಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು.
ರಾಜ್ಯ ಕಾಂಗ್ರೆಸಿಗರು ಬಿದರಿ ಪಕ್ಷ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರು ಆದ್ದರಿಂದ ದೆಹಲಿ ಮಟ್ಟದ ನಾಯಕರ ಪ್ರಭಾವ ಬಳಸಿ ರಾಜ್ಯ ನಾಯಕರ ಜೊತೆ ಸಂಧಾನ ನಡೆಸಿ ಬಿದರಿ ಪಕ್ಷ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಪಕ್ಷದ ಈ ಬೆಳವಣಿಗೆಗಳು ನಾಯಕರ ಅಸಮಾಧಾನಕ್ಕೆ ಕಾರಣವಾಗುತ್ತದೆಯೇ ಕಾದು ನೋಡಬೇಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ