ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವರಿಷ್ಠರ ಹೆಗಲಿಗೆ

ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿ ಬಂದಿದ್ದ 2150 ಅರ್ಜಿಗಳನ್ನು ಪರಿಶೀಲಿಸಿ 600ಕ್ಕೆ ಇಳಿಕೆ ಮಾಡಿ ಕೇಂದ್ರ ನಾಯಕರಿಗೆ ಕಳುಹಿಸಿಕೊಡಲಾಗಿದೆ. ಹಾಲಿ 71 ಶಾಸಕರಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.
ಅಪರಾಧ ಹಿನ್ನೆಲೆಯುಳ್ಳ ಅಭ್ಯರ್ಥಿಗಳು, 2 ಬಾರಿ ಸೋತ ಅಭ್ಯರ್ಥಿಗಳಿಗೆ ಟಿಕೆಟ್ ನೀಡದಂತೆ ವರಿಷ್ಠರಿಗೆ ಸಭೆ ಮನವಿ ಮಾಡಿದೆ. ಹಾಲಿ 8 ಶಾಸಕರ ಸ್ಥಾನಗಳಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. 8 ಜನ ಹಾಲಿ ಶಾಸಕರು ಟಿಕೆಟ್ ವಂಚಿತರಾಗುವ ಸಾಧ್ಯತೆ ಇದೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದಂತೆ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಅನ್ಯ ಪಕ್ಷೀಯರ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ನಡೆಯದೆ, ನಿರ್ಧಾರವನ್ನು ಹೈ ಕಮಾಂಡ್ ನಾಯಕರ ಅಂತಿಮ ನಿರ್ಧಾರಕ್ಕೆ ನೀಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟಿಕೆಟ್ ಹಂಚಿಕೆಯ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. ಕೇಂದ್ರ ಚುನಾವಣಾ ಸಮಿತಿಯಲ್ಲಿ ಗೋವಾ ಮಾಜಿ ಸಿಎಂ ಲೂಸಿನ್ಹೋ ಫೆಲೆರೋ ಮತ್ತು ರಾಹುಲ್ ಗಾಂಧಿ, ಕೇಂದ್ರ ಸಚಿವ ಜಿತೇಂದ್ರ ಪ್ರಸಾದ್, ರಾಜ್ಯ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಸದಸ್ಯರಾಗಿದ್ದಾರೆ.
ರಾಜ್ಯದ ಪರಿಸ್ಥಿತಿ ಬಗ್ಗೆ ಲೂಸಿನ್ಹೋ ಫೆಲೆರೋ ಅವರಿಗ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ಸಿದ್ಧರಾಮಯ್ಯ ಮತ್ತು ಪರಮೇಶ್ವರ್ ಭಾಗವಹಿಸುತ್ತಾರೆ. ಆದ್ದರಿಂದ ಈ ಇಬ್ಬರು ನಾಯಕರು ಯಾರಿಗೆ ಟಿಕೆಟ್ ನೀಡಬೇಕು ಎಂದು ಅಂತಿಮವಾಗಿ ತೀರ್ಮಾನಿಸುವ ಸಾಧ್ಯತೆ ಇದೆ.
ಒಟ್ಟಾರೆ ಸಾವಿರಾರು ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಕಡಿಮೆಮಾಡಿ ಕಾಂಗ್ರೆಸ್ ಮೊದಲ ಹಂತದ ಆಯ್ಕೆ ಪ್ರಕ್ರಿಯೆಗೆ ಅಂತ್ಯ ಹಾಡಿದೆ. ಯಾರಿಗೆ ಟಿಕೆಟ್ ದೊರೆಯಲಿದೆ, ಅಸಮಾಧಾನ ಉಂಟಾಗಲಿದೆಯೇ ಎಂಬುದು ದೆಹಲಿಯಿಂದ ಹೊರಬೀಳುವ ಅಂತಿಮ ಪಟ್ಟಿಯ ಮೇಲೆ ನಿರ್ಧಾರಿತವಾಗಿದೆ.
ಈ ಬಾರಿ ವಿಧಾನಸಭೆ ಚುನಾವಣೆ ಗೆದ್ದು ಅಧಿಕಾರದ ಗದ್ದುಗೆ ಏರುವ ಉತ್ಸಾಹದಲ್ಲಿರುವ ಕಾಂಗ್ರೆಸ್, ಅಭ್ಯರ್ಥಿಗಳ ಪಟ್ಟಿಯನ್ನು ಎಂದು ಅಂತಿಮಗೊಳಿಸಲಿದೆ ಎಂದು ಕಾದು ನೋಡಬೇಕು. ಇದರ ನಡುವೆಯೇ ವಲಸಿಗರ ಸೇರ್ಪಡೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ. ಮಾ.21ರಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಸಲಿರುವ ಸಭೆಯಲ್ಲಿ ವಲಸಿಗರಿಗೆ ಸ್ಪಷ್ಟ ಸಂದೇಶ ರವಾನೆಯಾಗುವ ಸಾಧ್ಯತೆ ಇದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications