ಮೇಸ್ತ್ರಿ ಆಗಿದ್ದ ಬಿಎಸ್ ವೈ ಓನರ್ ಅಂದ್ರೆ ನಂಬ್ಬೇಡಿ
ಭಾಗ್ಯಲಕ್ಷ್ಮಿ, ಸೈಕಲ್ ವಿತರಣೆ ಯೋಜನೆಯ ಮೂಲಕ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಅವರನ್ನು ಸಿಎಂ ಮಾಡಿದ್ದು ಬಿಜೆಪಿ ಎಂಬುದನ್ನು ಅವರು ಮರೆತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಬಿಎಸ್ವೈ ಶಿಕಾರಿಪುರದಿಂದ ತಂದು ಈ ಸವಲತ್ತುಗಳನ್ನು ಜನತೆಗೆ ನೀಡುತ್ತಿದ್ದರೆ ಸದಾನಂದಗೌಡ ಪ್ರಶ್ನಿಸಿದರು.
ಗುರುವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸಾಧನೆ ವೈಯಕ್ತಿಕ ಸಾಧನೆ ಅಲ್ಲ ಎಂಬುದು ಜನರಿಗೆ ಗೊತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು ಈಗಾಗಲೇ ಪಕ್ಷ ಅಧಿಕಾರಕ್ಕೆ ಬಂದೇ ಬಿಟ್ಟಿದೆ ಎಂಬಂತೆ ವರ್ತಿಸುತ್ತಿದ್ದು, ಹಗಲು ಕನಸು ಕಾಣುತ್ತಿದ್ದಾರೆ. ಅದು ಎಂದಿಗೂ ನನಸಾಗುವುದಿಲ್ಲ. ಇದರ ಜೊತೆಗೆ ಕೆಜೆಪಿ ನಾಯಕರು ಕುಣಿಯುತ್ತಿರುವುದು ನಗೆ ಉಕ್ಕಿಸುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಯಕ್ಷಗಾನ, ಬಯಲಾಟ ಬೆಳಕಿಗೆ ಬರಲಿದೆ ಸದಾನಂದರು ತಮ್ಮ ಎಂದಿನ ಸ್ಮೈಲ್ ಎಸೆದರು.
ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಯಾರು ಭಾವಿಸುವುದು ಬೇಡ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಗದ್ದುಗೆ ಹಿಡಿಯುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಚುನಾವಣೆಯಲ್ಲಿ ಸರಕಾರದ ಸಾಧನೆಯನ್ನು ಮುಂದಿ ಟ್ಟುಕೊಂಡು ಮತದಾರರ ಬಳಿಗೆ ತೆರಳಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ರೀನಾ ಪ್ರಕಾಶ್ ಮಾತನಾಡಿ, ವಿಧಾನಸಭಾ ಚುನಾವಣೆ ಯಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸದಾನಂದಗೌಡ, ಈ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.