ಕಾಂಗ್ರೆಸ್ ಪಟ್ಟಿ ಸಿದ್ದ ಯಾರಿಗೆ ಲಾಟರಿ ?
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ, ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ನೂರು ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಹಾಲಿ 60 ಶಾಸಕರು ಮತ್ತು 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆದೇಶದಂತೆ ಯುವಕರಿಗೆ ಟಿಕೆಟ್ ನೀಡಿ ಎಂದು ಸೋನಿಯಾ ಗಾಂಧಿ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಚುನಾವಣೆಯಲ್ಲಿ ಕಡಿಮೆ ಮತಗಳನ್ನು ಪಡೆದು ಸೋತ 25 ಅಭ್ಯರ್ಥಿಗಳಿಗೆ ಈ ಬಾರಿ ಟಿಕೆಟ್ ನೀಡಲು ಹೈ ಕಮಾಂಡ್ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಆಕಾಂಕ್ಷಿಗಳು ದೆಹಲಿಯಲ್ಲಿ : ಟಿಕೆಟ್ ಗಾಗಿ ಕಾಂಗ್ರೆಸ್ ನಲ್ಲಿ ವಿಪರೀತ ಲಾಬಿ ನಡೆದಿದ್ದು, ಕೇಂದ್ರದಲ್ಲಿರುವ ಸಚಿವರ ಮೂಲಕ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದಾರೆ. ಸಿದ್ಧರಾಮಯ್ಯ, ಪರಮೇಶ್ವರ್ ಮತ್ತು ಎಸ್.ಆರ್.ಪಾಟೀಲ್ ಮುಂತಾದವರ ಬಳಿ ಟಿಕೆಟ್ ಆಕಾಂಕ್ಷಿಗಳು ನಿರಂತರವಾಗಿ ಮಾತುಕತೆಯಲ್ಲಿ ತೊಡಗಿದ್ದಾರೆ.
ಸಚಿವ ಆನಂದ್ ಸಿಂಗ್ ಇಂದು ದೆಹಲಿಗೆ ಬಂದಿಳಿದಿದ್ದು, ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಬಿ.ಸಿ.ಪಾಟೀಲ್, ರಾಣಿ ಸತೀಶ್, ತೇಜಸ್ವಿನಿ ಶ್ರೀರಮೇಶ್ ಮುಂತಾದವರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಮಹಿಳೆಯರಿಗೂ ಟಿಕೆಟ್ ಹಂಚಿಕೆಯಲ್ಲಿ ಆದ್ಯತೆ ನೀಡಬೇಕು ಎಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ.
ನೂರು ಜನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿರುವುದರಿಂದ ಉಳಿದ ಸ್ಥಾನಗಳನ್ನು ಪಡೆಯಲು ತೀವ್ರ ಪೈಪೋಟಿ ಆರಂಭವಾಗಿದೆ. ಮುಂದಿನ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗಂಭೀರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ