80 ದಾಟಿದ ಕೈ ನಾಯಕರಿಗೆ ಟಿಕೆಟ್ ಇಲ್ಲವೇ?

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ಧಾರದಂತೆ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ, ಯುವಕರಿಗೆ ಹೆಚ್ಚಿನ ಮಹತ್ವ ನೀಡಬೇಕು. ಆದರೆ, ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಲು ಸಾಧ್ಯವಿಲ್ಲ. ಆದ್ದರಿಂದ ಎಂಬತ್ತು ವರ್ಷ ದಾಟಿದವರಿಗೆ ಟಿಕೆಟ್ ನೀಡಬಾರದು ಎಂಬ ರಾಹುಲ್ ಅವರ ನಿಯಮ ಪಾಲನೆ ಸಾಧ್ಯವೇ ? ಎಂಬ ಪ್ರಶ್ನೆ ಮೂಡಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಸದ್ಯ 80 ವರ್ಷ ವಯಸ್ಸು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದ ಕೃಷ್ಣ ರಾಜ್ಯ ರಾಜಕಾರಣಕ್ಕೂ ಮರಳದೆ, ನಾಯಕರಿಗೆ ಸಲಹೆಗಳನ್ನು ನೀಡುತ್ತಾ, ಸಭೆಗಳಿಂದ ದೂರ ಉಳಿದಿದ್ದಾರೆ.
ರಾಜ್ಯ ಚುನಾವಣಾ ಪ್ರಚಾರ ಸಮಿತಿ ಸದಸ್ಯರಾಗಿರುವ ಕೃಷ್ಣ ಚುನಾವಣೆಯಲ್ಲಿ ರಾಜರಾಜೇಶ್ವರಿ ನಗರ ಅಥವ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿದೆ. ಹೈಕಮಾಂಡ್ ನಾಯಕರು ಕೃಷ್ಣ ಅವರಿಗೆ ಟಿಕೆಟ್ ನೀಡಲು ನಿರಾಕರಿಸುವುದಿಲ್ಲ. ಹಾಗಾದರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ಮನ್ನಣೆ ದೊರೆಯುವುದಿಲ್ಲವೇ?
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ಈಗಾಗಲೇ 83 ವರ್ಷ. ಈ ಚುನಾವಣೆಯಲ್ಲಿ ಸಾಗರ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕಾಗೋಡು ತಯಾರಿ ಆರಂಭಿಸಿದ್ದಾರೆ. ಹಾಲಿ ಬಿಜೆಪಿ ಶಾಸಕ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ಹವಣಿಸುತ್ತಿದ್ದಾರೆ. ಕಾಗೋಡು ಅವರಿಗೆ ಟಿಕೆಟ್ ನೀಡಿದರೆ, ಮತ್ತೊಮ್ಮೆ ರಾಹುಲ್ ಗಾಂಧಿ ಆದೇಶ ಉಲ್ಲಂಘನೆ ಮಾಡಿದಂತಾಗುತ್ತದೆ.
ಕೆಪಿಸಿಸಿಯ ಖಜಾಂಚಿ ದಾವಣಗೆರೆ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರಸ್ತುತ 81 ವರ್ಷ ವಯಸ್ಸು 2008 ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಇವರು ಕಾಂಗ್ರೆಸ್ ನಿಂದ ಗೆದ್ದು ಬಂದಿದ್ದಾರೆ. ಇವರಿಗೆ ಈ ಬಾರಿ ಟಿಕೆಟ್ ನೀಡುವುದಿಲ್ಲವೆಂದು ಹೇಳಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಿಲ್ಲ. ಟಿಕೆಟ್ ನೀಡಿದರೆ ರಾಹುಲ್ ಗಾಂಧಿ ಅಭಿಪ್ರಾಯಕ್ಕೆ ಬೆಲೆ ನೀಡದಂತಾಗುವುದಿಲ್ಲ.
ರಾಹುಲ್ ಗಾಂಧಿ ನಿಲುವಿನಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಇಕ್ಕಟ್ಟಿಗೆ ಸಿಲುಕಿದೆ. ಶಾಸಕರಾಗಿ ಚುನಾಯಿತರಾದವರು ಮಾತ್ರ ಮುಖ್ಯ ಮಂತ್ರಿಯಾಗಲು ಅರ್ಹರು ಎಂಬ ಹೈಕಮಾಂಡ್ ನಿರ್ಧಾರದಿಂದ ಕೃಷ್ಣ ಅವರು ಚುನಾವಣೆಗೆ ಸ್ಪರ್ಧಿಸಲು ಉತ್ಸಾಹ ತೋರಿದ್ದಾರೆ. ಕಾಗೋಡು ತಿಮ್ಮಪ್ಪ ಮತ್ತು ಶಾಮನೂರು ಸ್ಪರ್ಧಿಸುವುದು ಅವರರವರ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಖಚಿತ. ಈ ನಾಯಕರಿಗೆ ಹೈಕಮಾಂಡ್ ಟಿಕೆಟ್ ನೀಡುತ್ತದೆಯೋ? ಇಲ್ಲವೋ ಕಾದು ನೋಡಬೇಕು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications