ಮಾ.30ರೊಳಗೆ ಅಂತಿಮ ಪಟ್ಟಿ : ಕುಮಾರಸ್ವಾಮಿ

ಬೆಂಗಳೂರಿನ ಪಕ್ಷದ ಮಾಧ್ಯಮ ಕಚೇರಿಯಲ್ಲಿ ಮಂಗಳವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಅವರು, 138 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಮಾ.28 ಮತ್ತು 30ರಂದು ಸಮಾವೇಶದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಈ ಬಾರಿ 12 ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಒಬ್ಬ ವಿಕಲಚೇತನ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ. ನಾಲ್ವರು ಶಾಸಕರು ಬೇರೆ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗವುದು. ಬೆಂಗಳೂರಿನ ಸಮಾವೇಶದಲ್ಲಿ ಚಾಮರಾಜನಗರದಿಂದ ದಾವಣಗೆರೆವರೆಗಿನ ಅಭ್ಯರ್ಥಿಗಳ ಪಟ್ಟಿ ಹಾಗೂ ಹುಬ್ಬಳ್ಳಿ ಸಮಾವೇಶದಲ್ಲಿ ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.
ಸಿದ್ದು ವಿರುದ್ದ ಕಿಡಿ : ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ವಕ್ತಾರರಂತೆ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ದೂರಿದರು.
ಕೆಜೆಪಿ ಮುಖಂಡ ಧನಂಜಯ್ ಕುಮಾರ್ ಕಾಂಗ್ರೆಸ್ ಮತ್ತು ಕೆಜೆಪಿ ಸಮ್ಮಿಶ್ರ ಸರ್ಕಾರ ರಚಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಾದರೆ ಕಾಂಗ್ರೆಸ್ ಯಡಿಯೂರಪ್ಪ ಅವರೊಂದಿಗೆ ಮೈತ್ರಿ ಮಾಡಿಕೊಂಡಿದೆಯೇ? ಎಂದು ಪ್ರಶ್ನಿಸಿದರು. ಸಮಯಕ್ಕೆ ತಕ್ಕಂತೆ ಮಾತನಾಡುವ ಸಿದ್ದರಾಮಯ್ಯ ಅವರು ರಾಜ್ಯದ ಅತ್ಯಂತ ಕಳಪೆ ಪ್ರತಿಪಕ್ಷ ನಾಯಕ ಎಂದರು.
ದೇವೇಗೌಡರ ಅಂಕಿತ ಬಾಕಿ : ಜೆಡಿಎಸ್ ಪಕ್ಷದ ಮೂಲಗಳ ಪ್ರಕಾರ ಅಭ್ಯರ್ಥಿಗಳ ಅಂತಿಮ ಪಟ್ಟಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಂಕಿತ ಬಾಕಿ ಇದೆ. ಬೆಂಗಳೂರು ನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವು ಬದಲಾವಣೆ ಮಾಡಲು ದೇವೇಗೌಡರು ಸೂಚಿಸಿದ್ದಾರೆ.
ಚಿಕ್ಕಪುಟ್ಟ ಬದಲಾವಣೆಗಳನ್ನು ಮಾಡಿದರೆ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಚುನಾವಣೆಗೆ ರಣತಂತ್ರ ರೂಪಿಸುತ್ತಿರುವ ಜೆಡಿಎಸ್ ಆಡಳಿತ ವಿರೋಧಿ ಅಲೆ ಬಳಸಿಕೊಂಡು ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲು ಯೋಜನೆ ರೂಪಿಸಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications