ಕಾಂಗ್ರೆಸ್ ಸಭೆ ಅಂತ್ಯ : ಮೊದಲ ಪಟ್ಟಿ ಯಾವಾಗ?

ನವದೆಹಲಿಯಲ್ಲಿ ಗುರುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರೊಂದಿಗಿನ ಸಭೆಯ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಇಂದಿನ ಸಭೆಯಲ್ಲಿ ಕೇವಲ ಚುನಾವಣಾ ಕಾರ್ಯತಂತ್ರ ಮತ್ತು ಅಭ್ಯರ್ಥಿಗಳ ಆಯ್ಕೆಯ ಮಾನದಂಡಗಳ ಕುರಿತು ಮಾತ್ರ ಚರ್ಚೆ ನಡೆಸಲಾಗಿದೆ ಎಂದರು.
ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಾ.30ರಂದು ಮತ್ತೊಮ್ಮೆ ಸಭೆ ಸೇರಲಾಗುವುದು ಎಂದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಭಿನ್ನಮತ ಉಂಟಾಗಿದೆ ಎಂಬ ಹೇಳಿಕೆಯನ್ನು ತಳ್ಳಿ ಹಾಕಿದ ಪರಮೇಶ್ವರ್,ಯಾವುದೇ ಭಿನ್ನಮತ ಉಂಟಾಗಿಲ್ಲ. ಇಬ್ಬರು ಸೇರಿ ಚರ್ಚಿಸಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು.
ಸಭೆಯಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಅವರಿಗೆ ಟಿಕೆಟ್ ನೀಡಲು ಅನುಮತಿ ದೊರತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮಾ.30ರ ಸಭೆಯಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಇಂದಿನ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂಧನ್ ಮಿಸ್ತ್ರೀ ಮುಂತಾದವರು ಪಾಲ್ಗೊಂಡಿದ್ದರು.
ನಾಲ್ವರು ಪಕ್ಷೇತರ ಶಾಸಕರ ಸೇರ್ಪಡೆಗೂ ಇಂದಿನ ಸಭೆಯಲ್ಲಿ ಅಂತಿಮ ಒಪ್ಪಿಗೆ ನೀಡಲಾಗಿದೆ. ಆದರೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಟಿಕೆಟ್ ನೀಡುವ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯಾವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಮಾನದದಂಡ ರೂಪಿಸಲಾಗಿದೆ. ಮಾನದಂಡಗಳು ಹೀಗಿವೆ.
* ಮೂರು ಬಾರಿ ಸೋತವರಿಗೆ ಟಿಕೆಟ್ ಇಲ್ಲ
* 25 ಸಾವಿರ ಮತಗಳ ಅಂತರಿಂದ ಸೋತವರಿಗೂ ಟಿಕೆಟ್ ಇಲ್ಲ
* ಐಪರೇಷನ್ ಕಮಲಕ್ಕೆ ಒಳಗಾದವರಿಗೆ ಟಿಕೆಟ್ ನೀಡಬಾರದು
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications