ಸೋನಿಯಾ ಬುಲಾವ್ ಎಸ್.ಎಂ.ಕೃಷ್ಣ ದೆಹಲಿಗೆ
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ದಿನದಿಂದ ದಿನಕ್ಕೆ ಕಗ್ಗಂಟಾಗಿ ಪರಿಣಮಿಸುತ್ತಿದೆ. ಅಭ್ಯರ್ಥಿಗಳನ್ನು ಆಯ್ಕೆಮಾಡಿದ ಸ್ಕ್ರೀನಿಂಗ್ ಕಮಿಟಿಯ ಪಟ್ಟಿ ಸೋನಿಯಾ ಕೆಂಗಣ್ಣಿಗೆ ಗುರಿಯಾಗಿದೆ. ಆದ್ದರಿಂದ ಕೃಷ್ಣ ಅವರಿಗೆ ಕರೆ ನೀಡಿರುವ ಸೋನಿಯಾ ಗಾಂಧಿ, ಎರಡು ದಿನಗಳವೊಳಗೆ ಪಟ್ಟಿ ಅಂತಿಮಗೊಳಿಸುವಂತೆ ಸಲಹೆ ನೀಡಿದ್ದಾರೆ.
ಗುರುವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ದರಿಂದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳದೆ, ಕೇವಲ ಟಿಕೆಟ್ ನೀಡಲು ಕೆಲವು ಮಾನದಂಡ ನಿಗದಿ ಪಡಿಸಿ ಸಭೆಯನ್ನು ಮಾ.30ಕ್ಕೆ ಮುಂದೂಡಾಗಿತ್ತು.
ಟಿಕೆಟ್ ಹಂಚಿಕೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ಜಟಾಪಟಿಯ ಸುಳಿವು ಪಡೆದಿರುವ ಸೋನಿಯಾ, ಕೃಷ್ಣರಿಂದ ಸಂಧಾನ ನಡೆಸಿ ಪಟ್ಟಿ ಅಂತಿಮಗೊಳಿಸಲು ಆಲೋಚಿಸಿ ರಾಜ್ಯದ ಹಿರಿಯ ನಾಯಕನಿಗೆ ದೆಹಲಿಗೆ ಬರುವಂತೆ ಕರೆ ನೀಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಕೃಷ್ಣ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಸೋನಿಯಾ ಅವರಿಗೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶುಕ್ರವಾರ ಮಧ್ಯಾಹ್ನ ಕೃಷ್ಣ ದೆಹಲಿಗೆ ತೆರಳಲಿದ್ದು, ನಾಳೆ ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಪರಮೇಶ್ವರ್ ಸಭೆ : ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸೋನಿಯಾಗಾಂಧಿ ಅತೃಪ್ತಿ ವ್ಯಕ್ತಪಡಿಸಿ, ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂದು ಆದೇಶ ನೀಡಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಶುಕ್ರವಾರ ಬೆಳಗ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರೀ ಜೊತೆ ಸಭೆ ನಡೆಸಿದರು.
ಪ್ರತಿ ಜಿಲ್ಲೆಯಲ್ಲಿ ಒಬ್ಬ ಮಹಿಳೆಗೆ ಟಿಕೆಟ್ ನೀಡುವುದು, ಯುವಕರಿಗೆ ಆದ್ಯತೆ, ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಮುಂತಾದವ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಸಂಜೆ ಮತ್ತೊಮ್ಮೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ತಿದ್ದುಪಡಿಯಾಗುವ ಸಂಭವವಿದೆ.
ಶನಿವಾರ ಕೇಂದ್ರ ಚುನಾವಣಾ ಸಮಿತಿ ಸಭೆ ಸೋನಿಯಾಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಸಭೆಯ ನಂತರ 58 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಯಾವುದೇ ಅಸಮಾಧಾನ ಉಂಟಾಗಬಾರದು ಎಂದು ನಿರ್ಧರಿಸಿರುವ ಪಕ್ಷದ ಪ್ರಮುಖರು ಎಚ್ಚರಿಕೆಯ ತಂತ್ರ ಅನುಸರಿಸುತ್ತಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ