ಧರಂ ವಿರುದ್ಧ ಗರಂ: ಬಾಬುರಾವ್ ಕಾಂಗ್ರೆಸ್ಸಿಗೆ ಗುಡ್ ಬೈ

ಮಾಜಿ ಸಚಿವ ಬಾಬುರಾವ್ ಚೌಹಾನ್ ಅವರು ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲ ಎಂಬ ಸುಳಿವು ಅರಿತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗಮನಾರ್ಹವೆಂದರೆ ಬಾಬುರಾವ್ ಚೌಹಾನ್ ಅವರು ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ, ಸೋತಿದ್ದರು.
ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಧರಂ ಸಿಂಗ್ ಅವರು ತಮಗೆ ಟಿಕೆಟ್ ತಪ್ಪಿಸುವ ಕಾಯಕದಲ್ಲಿ ತೊಡಗಿದ್ದಾರೆ ಎಂದು ಧರಂ ಸಿಂಗ್ ವಿರುದ್ಧ ಗರಂ ಆಗಿರುವ ಬಾಬುರಾವ್ ಅವರು ಚಿಂಚೋಳಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಮೇಲೆ ಸ್ಪರ್ಧಿಸಬಯಸಿದ್ದರು.
ಇದನ್ನು ವರಿಷ್ಠರ ಗಮನಕ್ಕೂ ತಂದಿದ್ದೆ. ಆದರೆ ಸಂಸದ ಧರಂ ಸಿಂಗ್ ತಮಗೆ ಟಿಕೆಟ್ ತಪ್ಪಿಸಿದ್ದಾರೆ. ಇದರಿಂದ ಬೇಸತ್ತು ಪಕ್ಷಕ್ಕೆ ಗುಡ್ ಬೈ ಹೇಳುತ್ತಿರುವುದಾಗಿ ಮಾಜಿ ಸಚಿವ ಬಾಬುರಾವ್ರ ಸ್ಪಷ್ಟಪಡಿಸಿದ್ದಾರೆ. ಆದರೆ ತಮ್ಮ ಮುಂದಿನ ನಡೆಯೇನು ಎಂಬುದರ ಬಗ್ಗೆ ಅವರು ಏನನ್ನೂ ಹೇಳಬಯಸಿಲ್ಲ.
ಸಂಸದ ಧರಂ ಸಿಂಗ್ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವ ಸಲುವಾಗಿ ನನಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಾಬುರಾವ್ ಚೌಹಾನ್, ಮುಂದೆ ಅಭಿಮಾನಿಗಳು ಮತ್ತು ಬೆಂಬಲಿಗರ ಜತೆ ಸಮಾಲೋಚನೆ ನಡೆಸಿ, ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಎಐಸಿಸಿ ಕಾರ್ಯದರ್ಶಿ ಮಸ್ತಾನ್ ಆಲಿ ಅವರು ಬೀದರ್, ಯಾದಗೀರ್ ಮತ್ತು ಗುಲ್ಬರ್ಗಾ ಜಿಲ್ಲೆಗಳ ಉಸ್ತುವಾರಿ ಹೊತ್ತಿದ್ದಾರೆ. ಅವರಿಗೆ ನನ್ನ ಪರವಾಗಿ ಅರ್ಜಿಯನ್ನೂ ಸಲ್ಲಿಸಿದ್ದೆ. ಆದರೆ ನನಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿದ್ದು, ರಾಜೀನಾಮೆ ನೀಡುತ್ತಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಬಾಬುರಾವ್ ಶನಿವಾರ ತಿಳಿಸಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications