ಬಿಜೆಪಿಯ 150 ಅಭ್ಯರ್ಥಿಗಳ ಪಟ್ಟಿ ಅಂತಿಮ

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಸಭೆಯ ಭಾನುವಾರ ಮುಕ್ತಾಯಗೊಂಡಿದ್ದು, 15ಒ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಸಿಎಂ ಜಗದೀಶ್ ಶೆಟ್ಟರ್, ಉಪ ಮುಖ್ಯಮಂತ್ರಿ ಆರ್.ಅಶೋಕ್ ಮುಂತಾದವರು ಪಟ್ಟಿಗೆ ಅಂತಿಮ ಒಪ್ಪಿಗೆ ನೀಡಿದ್ದಾರೆ.
ಏ.5ರಂದು ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಮೊದಲ ಪಟ್ಟಿಗೆ ವರಿಷ್ಠರಿಂದ ಹಸಿರು ನಿಶಾನೆ ದೊರೆಯುವ ಸಂಭವವಿದ್ದು, ಏ.7ರಂದು ಮೊಲದ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಕೆಜೆಪಿ ಮತ್ತು ಕಾಂಗ್ರೆಸ್ ಗೆ ವಲಸೆ ಹೋಗುವ ಶಾಸಕರ ಕ್ಷೇತ್ರಗಳ ಪಟ್ಟಿಯನ್ನು ಮಾತ್ರ ತಯಾರಿಸದೇ ಬಾಕಿ ಉಳಿಸಿಕೊಳ್ಳಲಾಗಿದೆ.
ಕಟ್ಟಾಗೆ ಟಿಕೆಟ್ : ಕ್ರಿಮಿನಲ್ ಆರೋಪ ಸಾಬೀತಾಗಿ ಜೈಲಿಗೆ ಹೋಗಿ ಬಂದವರಿಗೆ ಟಿಕೆಟ್ ಇಲ್ಲ ಎಂದು ಹೇಳುತ್ತಿದ್ದ ನಾಯಕರು ಕೆಲವು ಬದಲಾವಣೆ ಮಾಡಿಕೊಂಡಿದ್ದಾರೆ. ಗೆಲ್ಲುವ ಅಭ್ಯರ್ಥಿಗಳಾದ ಹೆಬ್ಬಾಳ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡ ಮತ್ತು ಮಾಲೂರು ಶಾಸಕ ಕೃಷ್ಣಯ್ಯ ಶೆಟ್ಟಿಗೆ ಟಿಕೆಟ್ ನೀಡಲು ಅಂತಿಮ ಒಪ್ಪಿಗೆ ನೀಡಲಾಗಿದೆ.
ಲಂಚ ಪಕ್ರರಣದಲ್ಲಿ ಜೈಲಿಗೆ ಹೋಗಿಬಂದ ಕೆಜೆಎಫ್ ಶಾಸಕ ವೈ.ಸಂಪಂಗಿಗೆ ಟಿಕೆಟ್ ನೀಡದಿರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಿಎಂ ಶೆಟ್ಟರ್, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮತ್ತೆರಡು ವಿಕೆಟ್ ಪತನ : ಬಿಜೆಪಿಯ ಮತ್ತೆರಡು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಜಗಳೂರು ಕ್ಷೇತ್ರದ ಹಾಲಿ ಬಿಜೆಪಿ ಶಾಸಕ, ಯಡಿಯೂರಪ್ಪ ಪರಮಾಪ್ತ ಎಸ್.ವಿ.ರಾಮಚಂದ್ರ ಏ.3ರಂದು ಕೆಜೆಪಿ ಸೇರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಯ ಮೇಲ್ಮನೆ ಸದಸ್ಯ ಮೋಹನ್ ಲಿಂಬಿಕಾಯಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಜೆಪಿ ಕೈ ಹಿಡಿಯಲಿದ್ದಾರೆ.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬಿಜೆಪಿ ಬಿಡುವುದು ಖಚಿತವಾಗಿದೆ. ಆದರೆ ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಕೆಜೆಪಿ, ಕಾಂಗ್ರೆಸ್ ಪಕ್ಷ ಸೇರುವ ಶಾಸಕರು ಪಕ್ಷ ತೊರೆದರೆ ಯಾರು ಪಕ್ಷದಲ್ಲಿ ಅಂತಿಮವಾಗಿ ಉಳಿಯಲಿದ್ದಾರೆ ಎಂಬುದರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications