ಕೆಪಿಸಿಸಿ ಕಚೇರಿ ಮುಂದೆ ಟಿಕೆಟ್ ಗಾಗಿ ಪ್ರತಿಭಟನೆ

ಯಶವಂತಪುರ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್, ಚಂದಾಪುರ ಮುಂತಾದ ಕ್ಷೇತ್ರಗಳ ನೂರಾರು ಕಾರ್ಯಕರ್ತರು ಮಂಗಳವಾರ ಕೆಪಿಸಿಸಿ ಕಚೇರಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದು, ಕಾರ್ಯಕರ್ತರನ್ನು ನಿಯಂತ್ರಿಸುವುದು ಪಕ್ಷದ ನಾಯಕರಿಗೆ ಮತ್ತು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
ತೇಜಸ್ವಿನಿಗೆ ಟಿಕೆಟ್ ಬೇಡ : ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಂಸದೆ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯರಾದ ಸುಷ್ಮಾ ರಾಜಗೋಪಾಲ ರೆಡ್ಡಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ 40 ಟಾಟಾ ಸುಮೋದಲ್ಲಿ ಆಗಮಿಸಿದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಸೋಮವಾರ ತೇಜಸ್ವಿನಿ ಅವರಿಗೆ ಟಿಕೆಟ್ ನೀಡದಂತೆ ನವದೆಹಲಿಯಲ್ಲೂ ಪ್ರತಿಭಟನೆ ನಡೆಸಲಾಗಿತ್ತು. ಕಾರ್ಯಕರ್ತರಿಗೆ ತೇಜಸ್ವಿನಿ ಗೌರವ ಕೊಡುವುದಿಲ್ಲ ಮತ್ತು ಅವರು ಸ್ಥಳೀಯರಲ್ಲ ಆದ್ದರಿಂದ ಅವರಿಗೆ ಟಿಕೆಟ್ ನೀಡಬಾರದು ಎಂಬುದು ಪ್ರತಿಭಟನಾಕಾರರ ಬೇಡಿಕೆ.
ಚಾಮರಾಜಪೇಟೆ : ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಿಂದ ಜಿ.ಎ.ಬಾವಾಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಮುಂದೆ ಧರಣಿ ಕೂತಿದ್ದಾರೆ. ಎಂ.ಸಿ.ಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂಬುದು ಧರಣಿ ಕುಳಿತವರ ಒತ್ತಾಯ.
ಯಶವಂತಪುರ :ಯಶವಂತಪುರ ಕ್ಷೇತ್ರದಲ್ಲಿ ಕೆ.ಸಿ.ಪ್ರಭಾಕರ ರೆಡ್ಡಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಇರಲಿಲ್ಲ. ಆದ್ದರಿಂದ ಪ್ರತಿಭಟನಾಕಾರರಿಗೆ ಯಾವುದೇ ಭರವಸೆ ದೊರಕಿಲ್ಲ. ಬುಧವಾರ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೊಳ್ಳುವ ನಿರೀಕ್ಷೆ ಇದ್ದು, ಅಭ್ಯರ್ಥಿಗಳು ಅಂತಿಮವಾದ ತಕ್ಷಣ ಪ್ರತಿಭಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications