ಕಾಂಗ್ರೆಸ್ ನಲ್ಲಿ ಮೊಳಗಿದೆ ಬಂಡಾಯದ ಕಹಳೆ

ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ದಿವಾಕರ ಬಾಬು ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಬಳ್ಳಾರಿ ಮಹಾನಗರ ಪಾಲಿಕೆಯ 26 ಸದಸ್ಯರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಟಿಕೆಟ್ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.
ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ತಮಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪ್ರಕಾಶಂ ದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದರು. ಟಿಕೆಟ್ ದೊರೆಯದಿದ್ದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಯಶವಂತಪುರ, ಚಾಮರಾಜಪೇಟೆ, ಬೆಂಗಳೂರು ದಕ್ಷಿಣ ಕ್ಷೇತ್ರಗಳ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಮಾಜಿ ಸಂಸದೆ ತೇಜಸ್ವಿನಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಚಾಮರಾಜಪೇಟೆಯಲ್ಲಿ ಎಂ.ಸಿ.ಕುಮಾರ್ ಅವರಿಗೆ, ಯಶವಂತಪುರ ಕ್ಷೇತ್ರದಲ್ಲಿ ಪ್ರಭಾಕರ ರೆಡ್ಡಿ ಅವರಿಗೆ ಟಿಕೆಟ್ ನೀಡುವಂತೆ ಪ್ರತಿಭಟನೆಗಳು ನಡೆದವು. ಮಂಗಳೂರು ಕಾಂಗ್ರೆಸ್ ನಲ್ಲೂ ಭಿನ್ನಮತ ಸ್ಪೋಟಗೊಂಡಿದ್ದು, ಮಾಜಿ ಶಾಸಕ ವಿಜಯ್ ಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನೀಡದಿದ್ದರೆ ಮಹಾನಗರ ಪಾಲಿಕೆಯ 12 ಸದಸ್ಯರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ನಾಯಕರ ಮಕ್ಕಳಿಗೆ ಟಿಕೆಟ್ : ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರರಿಗೆ ಟಿಕೆಟ್ ನೀಡದಿರಲು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಬಂಡಾಯದ ಬಿಸಿ ಎದುರಿಸುತ್ತಿರು ಕಾಂಗ್ರೆಸ್ ನಾಯಕರು ಕೇಂದ್ರ ಸಚಿವರ ಮಕ್ಕಳಿಗೆ ಟಿಕೆಟ್ ನೀಡಬಾರದು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇಂದು ಅಥವ ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ.
ವಿಧಾನಸಭೆ ಚುನಾವಣೆ ಗೆಲ್ಲುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯ ಶಮನಗೊಳಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಆದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ವಿಳಂಬವಾಗುತ್ತಿದೆ. ಕೇಂದ್ರಮತ್ತು ರಾಜ್ಯ ನಾಯಕರು ಹೇಗೆ ಬಂಡಾಯ ಶಮನಗೊಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications