ಬಿಜೆಪಿ ಬಿಡ್ತಾರಂತೆ ಸಚಿವ ಆನಂದ್ ಸಿಂಗ್
ಬಳ್ಳಾರಿಯಲ್ಲಿ ಗುರುವಾರ ಬೆಳಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಆನಂದ್ ಸಿಂಗ್, ಶೀಘ್ರದಲ್ಲೇ ಬಿಜೆಪಿ ತೊರೆಯುವುದಾಗಿ ಘೋಷಿಸಿದರು. ಬಳ್ಳಾರಿ ಜಿಲ್ಲೆಯ ವಿಜಯನಗರ ಹೊಸಪೇಟೆ ಕ್ಷೇತ್ರದ ಶಾಸಕರಾದ ಆನಂದ್ ಸಿಂಗ್ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಪವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಏ.11ರಂದು ಯಾವ ಪಕ್ಷ ಸೇರುವುದಾಗಿ ನಿರ್ಧಾರ ಪ್ರಕಟಿಸುವುದಾಗಿ ಆನಂದ್ ಸಿಂಗ್ ಹೇಳಿದ್ದಾರೆ. ಬಿಜೆಪಿ ಬಿಡುವುದು ಖಚಿತ ಆದರೆ, ಯಾವ ಪಕ್ಷ ಸೇರಬೇಕು ಎಂದು ತೀರ್ಮಾನಿಸಿಲ್ಲ. ಪಕ್ಷೇತರನಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಇತ್ತೀಚೆಗೆ ದೆಹಲಿಗೆ ತೆರಳಿದ್ದ ಆನಂದ್ ಸಿಂಗ್ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಮರಳಿದ್ದರು. ಕಾಂಗ್ರೆಸ್ ಟಿಕೆಟ್ ಖಾತ್ರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯುತ್ತಿದ್ದಾರೋ? ಅಥವ ಬೇರೆ ಪಕ್ಷ ಸೇರುತ್ತಾರೋ? ಎಂಬುದು ಸದ್ಯ ಕುತೂಹಲ ಮೂಡಿಸಿದೆ.
ಶ್ರೀರಾಮುಲು ನೇತೃತ್ವದ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಆನಂದ್ ಸಿಂಗ್ ಸೇರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಟಿಕೆಟ್ ದೊರೆಯದಿದ್ದರೂ ಪಕ್ಷೇತರರಾಗಿ ಸ್ಪರ್ಧಿಸಲು ಆನಂದ್ ಸಿಂಗ್ ಚಿಂತನೆ ನಡೆಸಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮುದುಡುತ್ತಿರುವ ಕಮಲ : 2008ರ ಚುನಾವಣೆಯಲ್ಲಿ ಗಣಿಧಣಿಗಳಿಂದದಾಗಿ ಬಳ್ಳಾರಿಯಲ್ಲಿ ನೆಲೆ ಕಂಡುಕೊಂಡಿದ್ದ ಬಿಜೆಪಿ ಜಿಲ್ಲೆಯಲ್ಲಿ ತನ್ನ ಪ್ರಭಾವ ಕಳೆದುಕೊಳ್ಳುತ್ತಾ ಸಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲು, ಬಳ್ಳಾರಿಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಬಿಜೆಪಿಯ ಕಮಲ ಮುದುಡುತ್ತಿದೆ.
ಜಿಲ್ಲೆಯ ಬಿಜೆಪಿಗೆ ಏಕೈಕ ಆಸರೆಯಾಗಿದ್ದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬಿಜೆಪಿ ಬಿಡುವುದು ಖಚಿತವಾಗಿದೆ. ಬಿಜೆಪಿಯ ಶಾಸಕರಾದ ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಮತ್ತು ಕಂಪ್ಲಿ ಶಾಸಕ ಸುರೇಶ್ ಬಾಬು ಬಿಎಸ್ಆರ್ ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿದ್ದಾರೆ.
ಯಾವ ಶಾಸಕರು ಬಿಜೆಪಿ ಬಿಡುವುದಿಲ್ಲ ಎಂಬ ಹೇಳಿಕೆಗಳ ನಡುವೆಯೇ ಬಿಜೆಪಿಯ ಶಾಸಕರು ಪಕ್ಷ ತೊರೆಯುತ್ತಿದ್ದಾರೆ. ಚುನಾವಣೆಯ ತಯಾರಿಯಲ್ಲಿ ತೊಡಗಿಕೊಂಡಿರುವ ಬಿಜೆಪಿಗೆ ವಲಸಿಗರು ದೊಡ್ಡ ಸಮಸ್ಯೆಯಾಗಿದ್ದಾರೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ