ಬಿಜೆಪಿ ಬಿಡೋಲ್ಲ ಮುರುಗೇಶ್ ನಿರಾಣಿ ಘೋಷಣೆ
ಗುರುವಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ್ದ ಮುರುಗೇಶ್ ನಿರಾಣಿ ಬಿಜೆಪಿ ತೊರೆಯುವುದಿಲ್ಲ ಎಂದು ಘೋಷಿಸಿದರು. ಈ ಮೂಲಕ ಕೆಜೆಪಿ ಸೇರುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಿರಾಸೆ ಉಂಟುಮಾಡಿದ್ದಾರೆ.
ಬುಧವಾರ ಜಮಖಂಡಿ ಕ್ಷೇತ್ರದ ಕೆಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕೆಜೆಪಿ ಸೇರುವ ಬಗ್ಗೆ ನಿರಾಣಿ ನಿರೀಕ್ಷೆ ಹುಟ್ಟಿಸಿದ್ದರು. ಹಾಗೂ ಜಮಖಂಡಿ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದರು.
ಆದರೆ, ಇಂದು ಬೀಳಗಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಕೆಜೆಪಿ ಸೇರುವ ಪ್ರಬಲ ಅಭ್ಯರ್ಥಿ ಮುರುಗೇಶ್ ನಿರಾಣಿ ಎಂದು ವಿಶ್ಲೇಷಿಸಲಾಗಿತ್ತು.
ಮಂಗಳವಾರ ಸಿಎಂ ಶೆಟ್ಟರ್ ಮತ್ತು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರ ಜೊತೆ ಹುಬ್ಬಳ್ಳಿಯಲ್ಲಿ ಮುರುಗೇಶ್ ನಿರಾಣಿ ಸಭೆ ನಡೆಸಿದ್ದರು. ಎರಡು ದಿನಗಳ ಬಳಿಕ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ಘೋಷಿಸಿದ್ದರು. ನಿರಾಣಿ ಜೊತೆಗಿನ ಸಭೆಯ ಬಳಿಕ ಮಾತನಾಡಿದ್ದ ಶೆಟ್ಟರ್ ನಿರಾಣಿ ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಗುರುವಾರ ಬೆಳಗ್ಗೆ ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದ್ದರು. ಸಂಜೆ ಮುರುಗೇಶ್ ನಿರಾಣಿ ಕೆಜೆಪಿಗೆ ಹೋಗದಿರುವ ನಿರ್ಧಾರ ಪ್ರಕಟಿಸಿದ್ದಾರೆ. ಇದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತೀವ್ರ ಹಿನ್ನಡೆ ಉಂಟಾಗಿದೆ. ಯಾವ ಶಾಸಕರ ಪಕ್ಷ ಸೇರ್ಪಡೆ ಬಗ್ಗೆಯೂ ಮಾತನಾಡುವುದಿಲ್ಲವೆಂದು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು ಅವರು ಬೇಸರಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ