ಸಿಎಂ ಸ್ಥಾನಕ್ಕಾಗಿ ಲಾಬಿ ಮಾಡಲ್ಲ : ಸಿದ್ದರಾಮಯ್ಯ

ಮಂಗಳವಾರ ಬೆಂಗಳೂರು ವರದಿಗಾರರ ಕೂಟ ಹಾಗೂ ಪ್ರೆಸ್ ಕ್ಲಬ್ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ತಮ್ಮ ಸಿಎಂ ಆಸೆಯ ಕುರಿತು ವಿವರಣೆ ನೀಡಿದರು. ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಲ್ಲಿ ನಾನು ಒಬ್ಬ. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ನಾಗಿರುತ್ತೇನೆ. ಯಾವುದೇ ಲಾಬಿ ನಡೆಸಿ ಅಧಿಕಾರ ಪಡೆಯವುದಿಲ್ಲ ಎಂದರು.
ಕೊನೆ ಚುನಾವಣೆ : ಈ ಬಾರಿಯ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ಆದರೆ, ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಕೆಲಸಗಳಿಂದಾಗಿ ಅಹಿಂದ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಕ್ರಮ ನಡೆದಿಲ್ಲ : ಜೀವನದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದೇನೆ. ಈ ಬಾರಿಯ ಟಿಕೆಟ್ ಹಂಚಿಕೆ ಸಂದರ್ಭದಲ್ಲೂ ಸಾಮಾಜಿಕ ನ್ಯಾಯ ಪಾಲಿಸಲಾಗಿದೆ. ಲಿಂಗಾಯಿತ ಸಮುದಾಯಕ್ಕೆ ಆದ್ಯತೆ ದೊರಕಿಲ್ಲ ಎಂಬುವುದು ದೂರುಗಳು ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿ ಭ್ರಮೆಯಲ್ಲಿ ಬದುಕುತ್ತಿದ್ದಾರೆ : ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರ ಪಡೆಯಲಿದೆ ಎಂಬ ಭ್ರಮೆಯಲ್ಲಿ ನಾಯಕರು ಬದುಕುತ್ತಿದ್ದಾರೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಗ್ಗಟ್ಟಿನಲ್ಲಿ ಬಲವಿದೆ : ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದರೆ ನಾಯಕರಲ್ಲಿ ಒಗ್ಗಟ್ಟಿದೆ. ನಾನು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು. ಆದರೂ ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷ ಸಂಘಟನೆಗೆ ಕೆಲಸ ಮಾಡುತ್ತೇವೆ ಎಂದರು.
ಇಬ್ರಾಹಿಂ ಗೆ ನಾನೇ ಟಿಕೆಟ್ ಕೊಡಿಸಿದ್ದು : ಭದ್ರಾವತಿ ಕ್ಷೇತ್ರದಲ್ಲಿ ಹಾಲಿ ಶಾಸಕ ಸಂಗಮೇಶ್ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಸಿ.ಎಂ. ಇಬ್ರಾಹಿಂ ಅವರಿಗಾಗಿ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಆದ್ದರಿಂದ ನಾನು ಇಬ್ರಾಹಿಂಗೆ ಟಿಕೆಟ್ ಕೊಡಿಸಲು ಪ್ರಭಾವ ಬಳಸಿದೆ ಎಂದು ಸ್ಪಷ್ಟಪಡಿಸಿದರು.
ಎಲ್ಲಾ ಹಗರಣ ಹೊರಕ್ಕೆ : ಅಕ್ರಮ ಗಣಿಗಾರಿಕೆ, ಡಿನೋಟಿಫಿಕೇಶನ್, ಭ್ರಷ್ಟಾಚಾರ ಸೇರಿದಂತೆ ಬಿಜೆಪಿ ಸರ್ಕಾರ ನಡೆಸಿರುವ ಎಲ್ಲಾ ಹಗರಣಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ತನಿಖೆ ನಡೆಸಲಿದೆ. ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿ ನಷ್ಟ ಮಾಡಿರುವ ಬಿಜೆಪಿ ಸಂಸ್ಕೃತಿ ಹಾಗೂ ದೇಶ ಸಂರಕ್ಷಣೆ, ಸಂವಿಧಾನದ ಬಗ್ಗೆ ಮಾತನಾಡುತ್ತದೆ ಎಂದು ಲೇವಡಿ ಮಾಡಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications