ಮೋದಿಯನ್ನು ಸ್ವಾಗತಿಸುತ್ತೇವೆ : ಜಿ. ಪರಮೇಶ್ವರ್

ಭಾನುವಾರ ಉಡುಪಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೋದಿ ರಾಜ್ಯಕ್ಕೆ ಆಗಮಿಸುವುದನ್ನು ನಾವು ಸ್ವಾಗತಿಸುತ್ತೇವೆ. ಅವರು, ಯಡಿಯೂರಪ್ಪ ಅವರ ಭ್ರಷ್ಟಾಚಾರ, ಸಜ್ಜನ ಪಕ್ಷಪಾತ ಮುಂತಾದವುಗಳ ಬಗ್ಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಒಡೆದು ಹೋಳಾಗಿದೆ. ಬಿಜೆಪಿಯ ಆಡಳಿತಾವಧಿಯಲ್ಲಿ ರಾಜ್ಯದಲ್ಲಾದ ಪ್ರಗತಿ ಕೇವಲ ಶೂನ್ಯ. ಗುಜರಾತ್ ನಲ್ಲಿ ಆದ ಅಭಿವೃದ್ಧಿಯನ್ನು ಬಿಜೆಪಿ ಸರ್ಕಾರವೇ ಕರ್ನಾಟಕದಲ್ಲಿ ಏಕೆ ಮಾಡಿಲ್ಲ ಎಂದು ಮೋದಿ ರಾಜ್ಯದ ಜನರಿಗೆ ವಿವರಿಸಬೇಕು ಎಂದು ಸವಾಲೆಸೆದರು.
ಬಿಜೆಪಿ ಪಕ್ಷದ ದುರಾಡಳಿತವೇ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತಂದುಕೊಡಲಿದೆ. ಯಾರ ಬೆಂಬಲವೂ ಇಲ್ಲದೆ ಕಾಂಗ್ರಸ್ ಸ್ವತಂತ್ರವಾಗಿ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಪ್ರಾದೇಶಿಕ ಪಕ್ಷಗಳ ನೆರವಿಲ್ಲದೆ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದರು.
ಭಿನ್ನಮತ ನಿವಾರಣೆಯಾಗಿದೆ : ಪಕ್ಷದಲ್ಲಿ ಟಿಕೆಟ್ ವಂಚಿತರ ಬಂಡಾಯವನ್ನು ಶಮನಗೊಳಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದ ನಂತರ, ಭಿನ್ನಮತೀಯರಿಗೆ ಸರ್ಕಾರ ಅಥವಾ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿರುವ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು. ಹಲವು ಕ್ಷೇತ್ರಗಳಲ್ಲಿ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಉಳಿದವರ ವಿರುದ್ಧ ಪಕ್ಷ ಕಠಿಣ ಕ್ರಮ ಕೈಗೊಳ್ಳಲಿದ್ದು, ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಎಂ ಆಯ್ಕೆ ಹೈಕಮಾಂಡ್ ಗೆ ಬಿಟ್ಟಿದ್ದು : ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ಗೆಲವು ಸಾಧಿಸುವುದು ಮಾತ್ರ ನಮ್ಮ ಮುಂದಿರುವ ಗುರಿ. ಚುನಾವಣೆ ನಂತರ ಮುಖ್ಯಮಂತ್ರಿ ಆಯ್ಕೆ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಮಾಧ್ಯಮಗಳು ಹಾಗೂ ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರಕಲಿದ ಎಂದು ಹೇಳಿವೆ. ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದೇವೆ ಎಂದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications