ಚುನಾವಣೆ ನಂತರ ಮುಖ್ಯಮಂತ್ರಿ ಘೋಷಣೆ : ಮೊಯ್ಲಿ
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜೀಜಾ ಹರಿಸಿಂಗ್ ಹಾಗೂ ನಿವೃತ್ತ ಅಧಿಕಾರಿ ಸುಂದರ್ ರಾಜ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಂತೆ ನಮ್ಮದು ಸರ್ವಾಧಿಕಾರಿ ಪಕ್ಷ ಅಲ್ಲ.
ಯಾವುದೇ ನಿರ್ಧಾರವನ್ನಾದರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ತೆಗೆದುಕೊಳ್ಳುತ್ತೇವೆ. ಮುಖ್ಯಮಂತ್ರಿ ಆಯ್ಕೆಯಲ್ಲೂ ಈ ಪ್ರಜಾಪ್ರಭುತ್ವ ಮಾದರಿ ಅನುಸರಿಸಲಾಗುವುದು. ಹೀಗಾಗಿ ಚುನಾವಣೆಗೆ ಮುನ್ನ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಘೊಷಿಸುವ ಅನಿವಾರ್ಯತೆ ಇಲ್ಲ ಎಂದರು.
ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಜೆಪಿ ನಾಯಕರು ತಲೆ ಕೆಡಿಸಿಕೊಳ್ಳುವುದು ಬೇಡ. ಸೂಕ್ತ ಸಮಯದಲ್ಲಿ ಅಭ್ಯರ್ಥಿಯನ್ನು ಘೋಷಿಸುತ್ತೇವೆ ಎಂದು ಕುಟುಕಿದರು.
ಕಾಂಗ್ರೆಸ್ ಕ್ರಿಮಿನಲ್ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂಬುವುದ ಸುಳ್ಳು. ಬಿಜೆಪಿ ಐದು ವರ್ಷಗಳಲಲ್ಲಿ ಮಾಡಿರುವ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿದೆ. ಈ ಚುನಾವಣೆಯಲ್ಲಿ ಅದಕ್ಕೆ ಜನರು ಉತ್ತರ ನೀಡಲಿದ್ದಾರೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರವನ್ನು ಭ್ರಷ್ಟಾಚಾರಿ ಎನ್ನುವ ಬಿಜೆಪಿ ರಾಷ್ಟ್ರೀಯ ನಾಯಕರು ತಮ್ಮ ಪಕ್ಷದ ರಾಜ್ಯ ಬಿಜೆಪಿ ಸರ್ಕಾರ ಏನು? ಎಂದು ಮೊದಲು ಉತ್ತರಿಸಲಿ ಎಂದು ಸವಾಲು ಹಾಕಿದರು.
ಜನಸೇವೆ ಮಾಡುವೆ : ದಕ್ಷಿಣ ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಜೀಜಾ ಮಾಧವ ಹರಿಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಮಾತನಾಡಿ, ನಿವೃತ್ತಿ ನಂತರವೂ ಜನಸೇವೆ ಮಾಡುವ ಆಸೆ ಉಳಿದಿತ್ತು.
ಕಾಂಗ್ರೆಸ್ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿದೆ. ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿಗಳು ಅವರ ಮೇಲಿನ ಆರೋಪಗಳಿಂದ ತಪ್ಪಿಸಿಕೊಳ್ಳಲು ನನ್ನ ಹೆಸರನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸೇರಿಸಿದ್ದರು ಎಂದು ದೂರಿದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ