ಭಾನುವಾರ ಬಸವನಗುಡಿಗೆ ಮೋದಿ ಆಗಮನ

ನರೇಂದ್ರ ಮೋದಿ ಆಗಮನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ. ಭಾನುವಾರ ಸಂಜೆ 5 ಗಂಟೆಗೆ ಮೋದಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಚುನಾವಣಾ ಪ್ರಚಾರ ಭಾಷಣೆ ಮಾಡಲಿದ್ದಾರೆ ಎಂದು ಹೇಳಿದರು.
ಭಾನುವಾರದ ಒಂದು ಕಾರ್ಯಕ್ರಮಕ್ಕೆ ಮಾತ್ರ ಮೋದಿ ಸಮಯವನ್ನು ನೀಡಿದ್ದಾರೆ. ಹೆಚ್ಚುವರಿಯಾಗಿ ಐದು ದಿನಗಳನ್ನು ಕರ್ನಾಟಕ ಪ್ರಚಾರ ಕಾರ್ಯಕ್ಕೆ ಮೀಸಲಿಡುವಂತೆ ರಾಜ್ಯ ಬಿಜೆಪಿ ಘಟಕ ಮನವಿ ಮಾಡಿದೆ. ಪರಿಶೀಲಿಸಿ ತಿಳಿಸುವುದಾಗಿ ಮೋದಿ ಹೇಳಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಈಗಾಗಲೇ ಒಂದು ಹಂತದ ಪ್ರಚಾರ ಮುಗಿಸಿದ್ದಾರೆ. ರಾಜ್ಯಸಭಾ ಸದಸ್ಯ ಅರುಣ್ ಜೇಟ್ಲಿ ಅಭ್ಯರ್ಥಿಗಳ ಆಯ್ಕೆಯಿಂದ ಪ್ರಣಾಳಿಕೆ ರಚಿಸುವವರೆಗೂ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಉಳಿದ ಜಿಲ್ಲೆಗಳಲ್ಲೂ ಪ್ರಚಾರ ನಡೆಸಬೇಕು ಎಂಬುದು ರಾಜ್ಯ ನಾಯಕರ ಒತ್ತಾಯವಾಗಿದೆ. ಹೆಚ್ಚುವರಿಯಾಗಿ ಐದು ದಿನಗಳ ಹೆಚ್ಚಿನ ಸಮಯವನ್ನು ಮೋದಿಯವರು ನೀಡುವ ಸಾಧ್ಯತೆ ಇದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಕರಾವಳಿ ಭಾಗದಲ್ಲಿ ಶುಕ್ರವಾರ ಸಂಸದ ವರುಣ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ ಕೆಲವು ಕ್ಷೇತ್ರಗಳಲ್ಲಿ ಹಿರಿಯ ನಾಯಕಿ ಉಮಾ ಭಾರತಿ ಏ.27ರಿಂದ ಪ್ರಚಾರ ನಡೆಸಲಿದ್ದಾರೆ ಎಂದು ಜೋಶಿ ತಿಳಿಸಿದರು. ( ರಾಷ್ಟ್ರೀಯ ನಾಯಕರ ಪ್ರಚಾರದ ವೇಳಾಪಟ್ಟಿ )
ಮೋದಿ ಕರ್ನಾಟಕ್ಕೆ ಪ್ರಚಾರಕ್ಕೆ ಆಗಮಿಸುವುದಿಲ್ಲ ಎಂಬ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಆದರೆ, ಕೇವಲ ಒಂದು ಕಾರ್ಯಕ್ರಮದಲ್ಲಿ ಮಾತ್ರ ಮಾತನಾಡಲಿದ್ದಾರೆ ಎಂಬುದು ಹಲವು ಜಿಲ್ಲೆಗಳ ಅಭ್ಯರ್ಥಿಗಳಿಗೆ ಬೇಸರ ಮೂಡಿಸಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ











Click it and Unblock the Notifications