ಪ್ರಧಾನಿ ಸಿಂಗ್: ಒಂದೇ ದಿನ ಬಿಜೆಪಿ 2 ಬಾರಿ ತರಾಟೆಗೆ

ಸೋಮವಾರ ಹುಬ್ಬಳ್ಳಿಯ ನೆಹರು ಮೈದಾನ ಮತ್ತು ಬೆಂಗಳೂರಿನ ಕುಂಬಳಗೋಡಿನಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮನಮಹೋಹನ್ ಸಿಂಗ್ ರಾಜ್ಯದ ಬಿಜೆಪಿ ಸರ್ಕಾರ ತಾನು ಅಭಿವೃದ್ದಿ ಕಾರ್ಯಗಳನ್ನು ಮಾಡಿಲ್ಲ. ಕೇಂದ್ರ ಸರ್ಕಾರದ ಅನುದಾನಗಳನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು, ಮೈಸೂರು, ಹುಬ್ಬಳ್ಳಿ ಸೇರಿದಂತೆ ಇತರ ಪ್ರಮುಖ ನಗರಗಳು ಕಾಂಗ್ರೆಸ್ ಆಡಳಿತವಿದ್ದಾಗ ಅಭಿವೃದ್ದಿಯಾದವು. ಕೇಂದ್ರದ ಆರ್ಥಿಕ ನೀತಿಗಳನ್ನು ಸದ್ಭಳಕೆ ಮಾಡಿಕೊಂಡು ಕಾಂಗ್ರೆಸ್ ನಗರಗಳ ಅಭಿವೃದ್ಧಿ ಮಾಡಿತು. ಬೆಂಗಳೂರಿಗೆ ವಿಶ್ವಮಾನ್ಯತೆ ತಂದು ಕೊಟ್ಟಿದ್ದು, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಎಂದು ಹೇಳಿದರು.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರು ಉನ್ನತ ಸ್ಥಾನದಲ್ಲಿದೆ. ಆದರೆ, ಮೂಲ ಸೌಕರ್ಯಗಳ ಅಭಿವೃದ್ಧಿಯಾಗಬೇಕು. ರಾಜ್ಯ ಸರ್ಕಾರ ನಗರಗಳ ಮೂಲ ಸೌಕರ್ಯ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ನರ್ಮ್ ಯೋಜನೆ ಸಮರ್ಪಕವಾಗಿ ಜಾರಿಯಾಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಗರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಭಾಷಣದ ಪ್ರಮುಖ ಅಂಶಗಳು
* ದೇಶದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವದ ಸ್ಥಾನವಿದೆ. ಆದರೆ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಅಧಿಕಾರ ನಡೆಸಿದಾಗ ಕರ್ನಾಟಕ ಉತ್ತಮವಾಗಿ ಅಭಿವೃದ್ಧಿಯಾಗಿತ್ತು.
* ಎಸ್.ಎಂ.ಕೃಷ್ಣ ಮುಖ್ಯ ಮಂತ್ರಿಗಳಾಗಿದ್ದಾಗ ಐಟಿ-ಬಿಟಿ, ಕೃಷಿ ಕ್ಷೇತ್ರಗಳು ಉತ್ತಮವಾಗಿ ಪ್ರಗತಿಯಾಗಿದ್ದವು. ಆದರೆ, ಕಳೆದ ಐದು ವರ್ಷಗಳಿಂದ ರಾಜ್ಯದ ಆರ್ಥಿಕ ಪ್ರಗತಿ ಕುಂಠಿತವಾಗಿದೆ.
* ಉದ್ಯೋಗ ಸೃಷ್ಠಿ, ಕುಡಿಯುವ ನೀರು, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಯಾವುದೇ ಅಭಿವೃದ್ಧಿಯ ಯೋಜನೆಗಳನ್ನು ಕೈಗೊಂಡಿಲ್ಲ.
* ಕೇಂದ್ರ ಸರ್ಕಾರದ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲಿಲ್ಲ.
* ರೈತರು ಇಂದು ಉದ್ಯೋಗ ಅರಸಿ ಪಟ್ಟಣಕ್ಕೆ ವಲಸೆ ಹೋಗುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ.
* ಭ್ರಷ್ಟಾಚಾರವೇ ಬಿಜೆಪಿ ಸರ್ಕಾರದ ಸಾಧನೆ. ಸಚಿವರು ಭ್ರಷ್ಟಾಚಾರ ನಡೆಸಿ, ತಮ್ಮ ಸ್ಥಾನ ಕಳೆದುಕೊಂಡರು.
* ರಾಜ್ಯದಲ್ಲಿ ಭ್ರಷ್ಟ ಸರ್ಕಾರವನ್ನು ಬದಲಾವಣೆ ಮಾಡಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಇದು ಸಕಾಲವಾಗಿದೆ.
* ಜನತೆಗೆ ನೀರು ಹಾಗೂ ವಿದ್ಯುತ್ ಪೂರೈಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ.
ಭರವಸೆಗಳು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ. ಉದ್ಯೋಗ ಸೃಷ್ಟಿಸುತ್ತೇವೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಪಿಜಿ ಪೈಪ್ಲೈನ್ ಮೂಲಕ ಅಡುಗೆ ಅನಿಲ ಪೂರೈಸುವ ವ್ಯವಸ್ಥೆ ಜಾರಿಗೆ ತರುತ್ತೇವೆ ಎಂದು ಪ್ರಧಾನಿ ಭರವಸೆ ನೀಡಿ, ಮತ ನೀಡುವಂತೆ ಮನವಿ ಮಾಡಿದರು.
ಮನಮೋಹನ್ ಸಿಂಗ್ ಅವರಿಗೆ ಎರಡು ನಗರದಲ್ಲಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡೀಸ್, ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತೀಕಟ್ಟಿ ಪ್ರಧಾನಿ ಜೊತೆಗೆ ಆಗಮಿಸಿದ್ದರು.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications