ಮತದಾನ : ಯಾರು ಏನು ಹೇಳಿದರು ?
ಭಾನುವಾರ ಹುಬ್ಬಳ್ಳಿಯಲ್ಲಿ ಕುಟುಂಬದ ಸದಸ್ಯರೊಂದಿಗೆ ಮತದಾನ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ದೇಶದಿಂದ ತೊಲಗಿಸಲು ಇದು ಜನರಿಗೆ ಒಳ್ಳೆಯ ಸಂದರ್ಭ ಎಂದು ಹೇಳಿದರು.
ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಮತ ನೀಡುವಂತೆ ಮನವಿ ಮಾಡಿದರು. ಕಾಂಗ್ರೆಸ್ ಅಥವ ಪ್ರಾದೇಶಿಕ ಪಕ್ಷಗಳಿಗೆ ಮತ ನೀಡದೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದರು. ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ನಡೆಸಲಿದೆ ಎಂದು ವಿಶ್ವಾಶ ವ್ಯಕ್ತಪಡಿಸಿದರು.
ಮಂಗಳೂರು : ಮಂಗಳೂರಿನಲ್ಲಿ ಮತದಾನ ಮಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪ ಮೊಯ್ಲಿ, ಕರ್ನಾಟಕದ ಜನರು ಬಿಜೆಪಿ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಐದು ವರ್ಷಗಳ ಕಾಲ, ಅಭಿವೃದ್ಧಿ ರಹಿತವಾಗಿ ಬಿಜೆಪಿ ಸರ್ಕಾರ ಆಡಳಿತ ನಡೆಸಿದ್ದಾರೆ. ಬದಲಾವಣೆ ಬಯಸಿರುವ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಜಯಗಳಿಸಿ ಸಂಪೂರ್ಣ ಬಹುಮತದಿಂದ ಸರ್ಕಾರ ರಚಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಾದೇಶಿಕ ಪಕ್ಷಗಳು ಮತ್ತು ಬಿಜೆಪಿ ಈ ಬಾರಿ ವಿರೋಧ ಪಕ್ಷದ ಸ್ಥಾನ ಅಲಂಕರಿಸಲಿವೆ ಎಂದು ಭವಿಷ್ಯ ನುಡಿದರು. ಸ್ಥಿರ ಮತ್ತು ಅಭಿವೃದ್ಧಿ ಪರವಾದ ಸರ್ಕಾರಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಅವರು ಮನವಿ ಮಾಡಿದರು.
ಶಿವಮೊಗ್ಗ : ಶಿಕಾರಿಪುರದಲ್ಲಿ ಬೆಳಗ್ಗೆ ಏಳು ಗಂಟೆಗೆ ಮತದಾನ ಮಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. ನನ್ನ ಗೆಲುವು ಕೆಜೆಪಿ ಅಧಿಕಾರ ಹಿಡಿಯಲು ಸಹಕಾರಿ ಆಗಲಿದ್ದು, ಚುನಾವಣೆಯಲ್ಲಿ ಬಹುಮತ ಪಡೆದು ಕೆಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿದರು.
ಶಾಂತಿಯುತ ಮತದಾನ : ರಾಜ್ಯದಲ್ಲಿ ಶಾಂತಿಯುತ ಮತ ದಾನ ನಡೆದಿದ್ದು, ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಆರ್.ಅಶೋಕ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಗಿರುವ ಅಶೋಕ್, ರಾಜ್ಯದ ಎಲ್ಲೆಡೆ ಶಾಂತಿಯುತ ಮತದಾನ ನಡೆಯಿತು ಎಂದು ಹೇಳಿದರು.
ಶಾಂತಿಯುತ ಮತ್ತು ನ್ಯಾಯ ಸಮ್ಮತ ಮತದಾನಕ್ಕೆ ಅನುಕೂಲವಾಗುವಂತೆ ರಾಜ್ಯಾದ್ಯಂತ ಬಿಗಿಬಂದೋಬಸ್ತ್ ಮಾಡಲಾಗಿತ್ತು. ಮತದಾನದ ಭದ್ರತೆಗಾಗಿ ರಾಜ್ಯ ಪೊಲೀಸರಲ್ಲದೆ ಗಡಿಭದ್ರತಾ ಪಡೆ ಸೇರಿದಂತೆ ಕೇಂದ್ರ ಭದ್ರತಾ ಪಡೆಯ ನೆರವನ್ನು ಪಡೆಯಲಾಗಿತ್ತು. ಜನರು ಶಾಂತಿ ಕಾಪಾಡಿಕೊಂಡು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದರು.