ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಹೆಸರು ಘೋಷಣೆ
ಬೆಂಗಳೂರು, ಮೇ. 10 : ಎಲ್ಲ ಅಡೆತಡೆಗಳನ್ನು ಮೆಟ್ಟಿನಿಂತ ಛಲಗಾರ, ಕುರುಬರ ನಾಯಕ ಸಿದ್ದರಾಮೇಗೌಡ ಸಿದ್ದರಾಮಯ್ಯ (64) ಅವರು ಕರ್ನಾಟಕದ 28ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರ ಬೆಂಬಲ ಪಡೆದ ಸಿದ್ದರಾಮಯ್ಯ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿ ಎಂದು ಅಧಿಕೃತವಾಗಿ ಶುಕ್ರವಾರ ಘೋಷಿಸಲಾಗಿದೆ.
ವೀಕ್ಷಕರಾಗಿ ಎಐಸಿಸಿ ಪರವಾಗಿ ಬೆಂಗಳೂರಿಗೆ ಬಂದಿದ್ದ ಕೇಂದ್ರ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿ, ಅವರ ಹೆಸರನ್ನು ಅಧಿಕೃತವಾಗಿ ಸಂಜೆ 5 ಗಂಟೆಯ ಹೊತ್ತಿಗೆ ಘೋಷಿಸಿದರು. ಸೋಮವಾರ ಮೇ 13ರಂದು ಕಂಠೀರವ ಸ್ಟೇಡಿಯಂನಲ್ಲಿ ಬೆಳಿಗ್ಗೆ 11.15ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸುವ ಮುನ್ನವೇ ಕೆಪಿಸಿಸಿ ಕಚೇರಿಯ ಮುಂದೆ ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು. ಸಿದ್ದರಾಮಯ್ಯ ಪರ ಬೆಂಬಲಿಗರ ಹರ್ಷೋದ್ಘಾರ ಮುಗಿಲುಮುಟ್ಟಿತ್ತು. ಎಲ್ಲರೂ ಸಿದ್ದು ಅವರಿಗೆ ಹೂಗುಚ್ಛ ನೀಡುತ್ತಿದ್ದರು. ಸಿದ್ದು ಅವರ ಹೆಸರು ಘೋಷಣೆಯಾಗುತ್ತಿದ್ದಂತೆ ಬೆಂಬಲಿಗರ ಜಯಘೋಷವಂತೂ ಮುಗಿಲುಮುಟ್ಟಿತ್ತು. ಎಲ್ಲರಿಗೂ ಸಿಹಿ ಹಂಚಿ ಪಟಾಕಿ ಸಿಡಿಸಲಾಯಿತು. ಈ ಸಂಭ್ರಮಾಚರಣೆಯಿಂದಾಗಿ ಇಡೀ ದಿನ ಕ್ವೀನ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು.
ಎಕೆ ಆಂಟನಿ ಅವರು ಕೆಪಿಸಿಸಿ ಕಚೇರಿಯಲ್ಲಿ ಮೇ 10ರಂದು ಇಡೀ ದಿನ ಎಲ್ಲ ಶಾಸಕರನ್ನು ಭೇಟಿ ಮಾಡಿ, ಚೀಟಿ ಮುಖಾಂತರ ಗೌಪ್ಯವಾಗಿ ಅಭಿಪ್ರಾಯ ಸಂಗ್ರಹಿಸಿ ಸಿದ್ದರಾಮಯ್ಯ ಅವರ ಹೆಸರನ್ನು ಘೋಷಿಸಿದರು. ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಇದ್ದರೂ, ಸಿದ್ದರಾಮಯ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಉಳಿದ ನಾಯಕರು ಕೂಡ ಸಿದ್ದರಾಮಯ್ಯ ಅವರ ಹೆಸರಿಗೆ ಅನುಮೋದನೆ ಸೂಚಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಈಗ ಮುಕ್ತಾಯವಾಗಿದ್ದು, ಕಾಂಗ್ರೆಸ್ ಮುಖಾಂಡರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿಯಾಗಲಿದ್ದಾರೆ. ನೂತನ ಸರಕಾರ ರಚಿಸಲು ಹಕ್ಕು ಮಂಡನೆ ಮಾಡಲಿದ್ದಾರೆ. ಹಿಂದಿನ ಮುಖ್ಯಮಂತ್ರಿ ಬಿಜೆಪಿಯ ಜಗದೀಶ್ ಶೆಟ್ಟರ್ ಅವರು ಚುನಾವಣೆ ಫಲಿತಾಂಶ ಪ್ರಕಟವಾದ ದಿನವೇ ರಾಜೀನಾಮೆಯನ್ನು ಸಲ್ಲಿಸಿದ್ದರು. [ಸಿದ್ದರಾಮಯ್ಯ ವ್ಯಕ್ತಿಚಿತ್ರ]
ಸಿದ್ದು ಸರ್ವರಿಗೂ ಧನ್ಯವಾದ ಅರ್ಪಣೆ : "ಎಲ್ಲ ಅನಿಸಿಕೆಗಳನ್ನು ಹುಸಿಗೊಳಿಸಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟವಾದ ಬಹುಮತ ಕೊಟ್ಟಿದ್ದಾರೆ. ರಾಜ್ಯಕ್ಕೆ ಸ್ಥಿರ ಸರಕಾರ ಬರಬೇಕು, ಇದು ಆಗಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಮನಗಂಡು ಇಂಥ ತೀರ್ಪನ್ನು ರಾಜ್ಯದ ಜನತೆ ಕೊಟ್ಟಿದ್ದಾರೆ. ರಾಜ್ಯದ ಜನತೆ ಮತದಾರರನ್ನು ಹೃದಯಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ಸಿನ ಅಧಿನಾಯಕಿ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ನನ್ನ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನಾಗಿ ನೇಮಕ ಮಾಡಿದ್ದಾರೆ. ಅದಕ್ಕಾಗಿ ಸೋನಿಯಾಜಿ, ರಾಹುಲ್ಜಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ."
"ಎಲ್ಲ ನೂತನ ಶಾಸಕರುಗಳು ನಾಯಕನಾಗಲು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಎಲ್ಲ ಶಾಸಕರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತಿದ್ದೇನೆ. ಖರ್ಗೆಯವರು, ಮೊಯ್ಲಿಯವರು, ರೆಹಮಾನ್ ಖಾನ್, ಕೆಎಚ್ ಮುನಿಯಪ್ಪನವರು ಭಾಗವಹಿಸಿ ಸಹಕಾರ ಕೊಟ್ಟಿದ್ದಾರೆ. ಮುಖ್ಯವಾಗಿ ಕೆಪಿಸಿಸಿ ಅಧ್ಯಕ್ಷರು ಡಾ. ಪರಮೇಶ್ವರ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಬೆಂಬಲ ಸೂಚಿಸಿದ್ದಾರೆ. ಅವರಿಗೆ ಮತ್ತು ಎಐಸಿಸಿ ವೀಕ್ಷಕರಾಗಿ ಬಂದಿದ್ದ ಎಕೆ ಆಂಟನಿ ಮತ್ತು ಇತರರಿಗೂ ಧನ್ಯವಾದಗಳು."












Click it and Unblock the Notifications