ಗಲಾಟೆ ಮಾಡೋದು ಕಾಂಗ್ರೆಸ್ ಸಂಸ್ಕೃತಿಯಲ್ಲ : ಖರ್ಗೆ
ಭಾನುವಾರ (ಮೇ.12) ರಾಜಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನೇಮಕಾತಿ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಇದನ್ನು ಎಲ್ಲರೂ ಗೌರವಿಸಬೇಕು. ಹೊಸ ಸರ್ಕಾರಕ್ಕೆ ಬೆಂಬಲ ಕೊಡಬೇಕು ಎಂದು ಕಳಕಳಿಯ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರಗಳಿಂದ ಜನ ರೋಸಿ ಹೋಗಿದ್ದಾರೆ. ಅಭಿವೃದ್ಧಿ ಕೆಲಸ-ಕಾರ್ಯಗಳು ಹಲವಾರು ವರ್ಷಗಳಿಂದ ಕುಂಠಿತಗೊಂಡಿವೆ. ಇದನ್ನು ಸರಿದಾರಿಗೆ ತಂದು ಶರವೇಗದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕಿದೆ. ಆದ್ದರಿಂದ ಎಲ್ಲ ದಲಿತ ಮುಖಂಡರು, ಕಾರ್ಯಕರ್ತರು ಅಸಹನೆ, ಆಕ್ರೋಶ, ಪ್ರತಿಭಟನೆ ಬಿಟ್ಟು ಹೊಸ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಖರ್ಗೆ ಅವರು ಮನವಿ ಮಾಡಿಕೊಂಡರು.
ಆದರೆ, ನಾಡಿನ ವಿವಿಧ ಭಾಗಗಳಲ್ಲಿ ಭಾನುವಾರ ಪ್ರತಿಭಟನೆ ಮುಂದುವರೆದಿದೆ. ಮೈಸೂರಿನ ಸಯ್ಯಾಜಿ ರಾವ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ನುಗ್ಗಿದ್ದ ದುಷ್ಕರ್ಮಿಗಳು ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ದಲಿತ ಸಂಘಟನೆಗಳು ತುಮಕೂರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ದಲಿತ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಗೆ ಸೂಕ್ತ ಸ್ಥಾನಮಾನಕ್ಕಾಗಿ ಆಗ್ರಹಿಸಿದ್ದಾರೆ. ಸೋನಿಯಾ ಹಾಗೂ ರಾಹುಲ್ ವಿರುದ್ಧ ಕಿಡಿ ಕಾರಿದ್ದಾರೆ. ನಂಜನಗೂಡಿ ಬಂದ್ ಆಚರಿಸಲಾಗುತ್ತಿದ್ದು, ಊಟಿಗೆ ಹೋಗುವ ರಸ್ತೆ ಬಂದ್ ಮಾಡಲಾಗಿದೆ. ಖರ್ಗೆ ಅವರಿಗೆ ಸಿಎಂ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ (ಮೇ.12) ಚಾಮರಾಜ ನಗರ ಜಿಲ್ಲೆ ಬಂದ್ ನಡೆಸಲು ವಿವಿಧ ದಲಿತ ಸಂಘಟನೆಗಳು ಕರೆ ನೀಡಿವೆ.
ಮುಖ್ಯಮಂತ್ರಿ ನೇಮಕಾತಿ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ಪಾಲನೆ ಮಾಡುವುದಷ್ಟೆ ನಮ್ಮ ಕೆಲಸ ಎಂದು ಪದೇ ಪದೇ ಕೇಳಿದ ಪ್ರಶ್ನೆಗೆ ಖರ್ಗೆ ಅವರು ಒಂದೇ ಉತ್ತರ ಕೊಟ್ಟರು. ನಿಮ್ಮ ಆಶಯಗಳನ್ನು ಈಡೇರಿಸುವಂತಹ ಕಾಲ ಬಂದರೂ ಬರಬಹುದು. ಆದರೆ, ಗಲಾಟೆ ಮಾಡುವುದು ನಮ್ಮ ಸಂಸ್ಕೃತಿಯಲ್ಲ, ನಾನು ಇದನ್ನು ಸಹಿಸುವುದೂ ಇಲ್ಲ ಎಂದರು.
ಒಂದು ವೇಳೆ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳಿಗೆ ಯಾವುದಾದರೂ ಅಸಮಾಧಾನ ಇದ್ದಲ್ಲಿ ಅದನ್ನು ಸೂಕ್ತ ವೇದಿಕೆಯಲ್ಲಿ ಪ್ರಸ್ತಾಪಿಸಿ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಬೀದಿಗಿಳಿಯುವುದು, ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಒಳ್ಳೆಯದಲ್ಲ. ಇದು ನಮ್ಮ ಸಂಸ್ಕೃತಿಯೂ ಅಲ್ಲ. ಈ ತಕ್ಷಣ ಬೀದಿ ಹೋರಾಟ ನಿಲ್ಲಿಸಬೇಕು ಎಂದರು.