ಗೋಹತ್ಯೆ ನಿಷೇಧ ಕಾಯ್ದೆಗಾಗಿ ತೀವ್ರ ಹೋರಾಟದ ಎಚ್ಚರಿಕೆ
ಬೆಂಗಳೂರು, ಮೇ 15: ಮುಖ್ಯಮಂತ್ರಿಯಾಗುತ್ತಿದ್ದಂತೆ ಗೋಹತ್ಯೆಗೆ ಅನುವು ಮಾಡಿಕೊಡುವ ವಿವಾದಾತ್ಮಕ ನಿರ್ಧಾರ ತೆಗೆದುಕೊಂಡಿರುವ ಸಿದ್ದರಾಮಯ್ಯ ವಿರುದ್ಧ ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಗೋಹತ್ಯೆ ತಡೆ ಕಾಯಿದೆ ವಿಚಾರವು ರಾಜ್ಯ ಸರಕಾರ ಮತ್ತು ಬಿಜೆಪಿ ನಡುವೆ ಸಂಘರ್ಷಕ್ಕೆ ನಾಂದಿಯಾಗುವ ಲಕ್ಷಣಗಳಿವೆ.
1964ರ ಗೋಹತ್ಯೆ ಕಾಯ್ದೆಯನ್ನೇ ಮುಂದುವರಿಸುವುದಾಗಿ ಸಿಎಂ ಸಿದ್ದು ಹೇಳಿರುವುದು ಬಿಜೆಪಿಯನ್ನು ಸಹಜವಾಗಿಯೇ ಕೆರಳಿಸಿದೆ. ಹಳೆಯ ಕಾಯಿದೆಗೆ ತಿದ್ದುಪಡಿ ತರುವ ಸಂಬಂಧ ತಾನು ಜಾರಿಗೆ ತರಲು ಉದ್ದೇಶಿಸಿದ್ದ ಕಾಯಿದೆಯನ್ನೇ ಜಾರಿಗೊಳಿಸಬೇಕು. ಇಲ್ಲವಾದರೆ ತೀವ್ರ ಹೋರಾಟ ನಡೆಸುವುದಾಗಿ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಈಶ್ವರಪ್ಪ ಸೇರಿದಂತೆ ಪ್ರಮುಖ ನಾಯಕರು ಎಚ್ಚರಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಉಮಮುಖ್ಯಮಂತ್ರಿ ಈಶ್ವರಪ್ಪ ಅವರು ಸದುದ್ದೇಶದಿಂದ ಜಾರಿಗೆ ತರಲಾಗಿರುವ ಗೋಹತ್ಯೆ ನಿಷೇಧ ಕಾಯಿದೆಯನ್ನು ಮುಂದುವರಿಸಿಕೊಂಡು ಹೋಗುವಂತೆ ಸಿದ್ದುಗೆ ಕಿವಿಮಾತು ಹೇಳಿದ್ದಾರೆ.
ಮಹಾತ್ಮ ಗಾಂಧಿ ಅವರ ಆಶಯದಂತೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರೂಪಿಸಿದ್ದ ಕಾಯಿದೆ ಅದು. ಬಹುಮತ ಸರಕಾರ ಅಧಿಕಾರದಲ್ಲಿದ್ದಾಗ ಕೈಗೊಂಡ ನಿರ್ಧಾರವನ್ನು ವಾಪಸ್ ಪಡೆಯುವುದು ಬೇಡ ಎಂದು ಬಿಜೆಪಿ ಮುಖಂಡರು ರಾಜ್ಯ ಸರಕಾರಕ್ಕೆ ಒಕ್ಕೊರಲಿನ ಆಗ್ರಹ ಮಾಡಿದ್ದಾರೆ.
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿಯೂ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಆದರೆ ಲೋಕಸಭಾ ಚುನಾವಣೆ ಮುನ್ನೆಲೆಯಲ್ಲಿ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುವುದು ಬೇಡ ಎಂದು ನಿನ್ನೆ ಸಿಎಂ ಸಿದ್ದು ಮನೆಗೆ ಭೇಟಿ ನೀಡಿದ್ದ ಚಿಕ್ಕಮಗಳೂರು ಶಾಸಕ ಸಿಟಿ ರವಿ ಅವರು ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದರು.












Click it and Unblock the Notifications