ಜಗದೀಶ್ ಶೆಟ್ಟರ್ ಬಿಜೆಪಿ ಶಾಸಕಾಂಗ ನಾಯಕ

ಬಿಜೆಪಿ ರಾಷ್ಟ್ರೀಯ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಭಯ ನಾಯಕರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರ ಆಯನೂರು ಮಂಜುನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇತ್ತ ಜಗದೀಶ್ ಶೆಟ್ಟರ್ BJP LP Leader ಆಗಿ ಆಯ್ಕೆಯಾಗಿದ್ದರೆ ಅತ್ತ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರನ್ನು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಈ ಮಧ್ಯೆ, ಶಾಸಕಾಂಗ ಪಕ್ಷದ ಉಪನಾಯಕರಾಗಿ ಆರ್ ಅಶೋಕ ಹಾಗೂ ಮೇಲ್ಮನೆಯ ಉಪ ನಾಯಕರಾಗಿ ಕೆಬಿ ಶಾಣಪ್ಪ ನೇಮಕವಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಸಭೆಯಲ್ಲಿ ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ, ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿವಿ ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಕೆಎಸ್ ಈಶ್ವರಪ್ಪ, ಆರ್ ಅಶೋಕ್ ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಗದೀಶ್ ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಲಾಗಿದೆ. ಅವರೇ ಶಾಸಕಾಂಗ ಪಕ್ಷದ ನಾಯಕ ಆಗುವುದು ಸೂಕ್ತ ಎಂಬುದು ಎಲ್ಲ ಶಾಸಕರ ಒಕ್ಕೊರಲ ಅಭಿಪ್ರಾಯವಾಗಿತ್ತು. ಆದ್ದರಿಂದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬೇರೆ ಯಾರನ್ನೂ ಪರಿಗಣಿಸಿಲ್ಲ.
ಜಾತಿವಾರು ಲೆಕ್ಕಾಚಾರದಲ್ಲೂ ಜಗದೀಶ್ ಶೆಟ್ಟರ್ ಅವರನ್ನೇ ಶಾಸಕಾಂಗ ಪಕ್ಷದ ನಾಯಕರನ್ನಾಗಿರುವುದು ಗಮನಾರ್ಹ. ಪ್ರಭಾವಿ ಸಮುದಾಯವಾದ ಲಿಂಗಾಯತ ನಾಯಕನಿಗೆ ಈ ಸ್ಥಾನವನ್ನೂ ತಪ್ಪಿಸಿದರೆ ಆ ಸಮುದಾಯದ ತಿರಸ್ಕಾರಕ್ಕೆ ಪಾತ್ರವಾಗಬಹುದೆಂದು ಪಕ್ಷದ ವರಿಷ್ಠರು ಅಭಿಪ್ರಾಯಪಟ್ಟರು ಎನ್ನಲಾಗಿದೆ.
ಪಟ್ಟು ಬಿಡದ ಬಿಜೆಪಿ: ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ಜಯ ಗಳಿಸಬೇಕು. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಿದರೆ ಪ್ರತಿಪಕ್ಷ ಸ್ಥಾನವನ್ನು ಪಡೆಯಬಹುದು. ಅಲ್ಲದೆ ಪರಿಣಾಮಕಾರಿಯಾಗಿ ಪ್ರತಿಪಕ್ಷ ಕಾರ್ಯ ನಿರ್ವಹಿಸಬಹುದು. ಈ ಬಗ್ಗೆ ಪಕ್ಷದ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ವರಿಷ್ಠರು ನಾಯಕರಿಗೆ ಕರೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಆತ್ಮಾವಲೋಕನಕ್ಕೆ ಮುಂದಾಗಿದ್ದು, ಮೇ 20 ಮತ್ತು 21ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಸಭೆ ನಡೆಸಲು ನಿರ್ಧರಿಸಿದೆ.
ಈ ಸಭೆಯಲ್ಲಿ ಜಿಲ್ಲಾವಾರು ಮುಖಂಡರೊಂದಿಗೆ ಚರ್ಚಿಸಿ ಆಯಾ ಜಿಲ್ಲೆಯಲ್ಲಿ ಸೋಲು ಅನುಭವಿಸಿರುವ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಕುರಿತೂ ಸಮಾಲೋಚಿಸಲು ನಿರ್ಧರಿಸಲಾಗಿದೆ.












Click it and Unblock the Notifications