ಜುಲೈನಲ್ಲಿ ಬಜೆಟ್ ಅಧಿವೇಶನ ಸಾಧ್ಯತೆ: ಸಿದ್ದರಾಮಯ್ಯ

ಮೇ. 29 ಮತ್ತು 30ರಂದು ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಕ್ರಿಯೆಗೆ ಸುಮಾರು ಒಂದೂವರೆ ದಿನ ಬೇಕು. ನಂತರ ಮೇ 30ರಂದು ಮಧ್ಯಾಹ್ನ ಸ್ಪೀಕರ್ ಆಯ್ಕೆ ನಡೆಯಲಿದೆ.14ನೇ ವಿಧಾನಸಭೆಯ ಅತ್ಯಂತ ಹಿರಿಯ ಸದಸ್ಯ ಕಾಗೋಡು ತಿಮ್ಮಪ್ಪ ಅವರನ್ನೇ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇದೇ 31ರಂದು ಉಭಯ ಸದನಗಳ ಜಂಟಿ ಸಮಾವೇಶದಲ್ಲಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮಾತನಾಡಲಿದ್ದಾರೆ. ಜೂನ್ 3 ರಿಂದ 3-4 ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆಯಲಿದೆ. ಬಜೆಟ್ ಅಧಿವೇಶನ ಜೂನ್ ಅಂತ್ಯದಲ್ಲಿ ಇಲ್ಲವೇ ಜುಲೈ ಮೊದಲ ವಾರದಲ್ಲಿ ಬಜೆಟ್ ಮಂಡನೆಯಾಗಲಿದೆ.
ಕಳೆದ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಕೇಂದ್ರ ಬಜೆಟ್ ಗೂ ಮುನ್ನವೇ ಬಜೆಟ್ ಮಂಡಿಸಿ ನಾಲ್ಕು ತಿಂಗಳ ಲೇಖಾನುದಾನ ಪಡೆದಿದೆ. ಈ ಅವಧಿ ಜುಲೈ ತಿಂಗಳಿನಲ್ಲಿ ಮುಗಿಯುತ್ತದೆ. ಹೀಗಾಗಿ ಹೊಸದಾಗಿ ಬಜೆಟ್ ಮಂಡಿಸಲು ಜುಲೈ ತಿಂಗಳ ತನಕ ಕಾಯಲೇಬೇಕು.
ಪರಿಷತ್ ಸದಸ್ಯರೊಬ್ಬರಿಗೆ ಸಚಿವರಾಗುವ ಅವಕಾಶ: ವಿಧಾನಸಭಾ ಸದಸ್ಯರಲ್ಲೇ ಹೆಚ್ಚಿನ ಆಕಾಂಕ್ಷಿಗಳು ಇದ್ದ ಕಾರಣ ವಿಧಾನ ಪರಿಷತ್ ಸದಸ್ಯರಿಗೆ ಸಂಪುಟದಲ್ಲಿ ಅವಕಾಶ ನೀಡಲು ಸಾಧ್ಯವಾಗಿಲ್ಲ. ವಿಸ್ತರಣೆ ಸಂದರ್ಭದಲ್ಲಿ ಪರಿಷತ್ ನ ಒಬ್ಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪರಿಷತ್ ಸದಸ್ಯರೇ ಮೇಲ್ಮನೆಯಲ್ಲಿ ಸಭಾನಾಯಕರಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಪರಿಷತ್ ನ ಒಬ್ಬರನ್ನು ಸಂಪುಟಕ್ಕೆ ತೆಗೆದುಕೊಳ್ಳಲೇ ಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕುಮಾರಸ್ವಾಮಿ vs ಸಿದ್ದರಾಮಯ್ಯ: ಅಸೆಂಬ್ಲಿಯಲ್ಲಿ ವಿರೋಧಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರ ಎದುರು ಕೂರುವುದು ಬಹುತೇಕ ಖಾತ್ರಿಯಾಗಿದೆ. ಬಿಜೆಪಿಯಿಂದ ಜಗದೀಶ್ ಶೆಟ್ಟರ್, ಕೆಜೆಪಿಯಿಂದ ಬಿಎಸ್ ಯಡಿಯೂರಪ್ಪ ಅವರು ಮುಂದಿನ ಸಾಲಿನಲ್ಲಿ ಕೂತು ಸದನದ ರಂಗೇರಿಸಲಿದ್ದಾರೆ.












Click it and Unblock the Notifications