ಸಿಎಂ ಸಿದ್ದು ಸಂಪುಟದಲ್ಲಿ ಮೋಟಮ್ಮಗೆ ಸಚಿವ ಸ್ಥಾನ?

ನವದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಅರ್ಧ ತಾಸಿಗೂ ಹೆಚ್ಚುಕಾಲ ಮಾತುಕತೆ ನಡೆಸಿದರು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಮತ್ತೊಬ್ಬ ಮಹಿಳೆಯರಿಗೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆದ್ದರಿಂದ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಅವರಿಗೆ ಅವಕಾಶ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಜೊತೆಗಿನ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಧಾನಮಂಡಲ ಅಧಿವೇಶನಕ್ಕೂ ಮೊದಲು ವಿಧಾನಪರಿಷತ್ ನ ಒಬ್ಬರು ಸದಸ್ಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತೇನೆ ಎಂದು ಹೇಳಿದರು. ಸೋನಿಯಾ ಗಾಂಧಿ ಸಹ ಸಂಪುಟ ವಿಸ್ತರಣೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಹೇಳಿದರು.
ಮುಂದುವರೆದ ಲಾಬಿ : ಸಚಿವ ಸಂಪುಟದಲ್ಲಿ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ವಿಧಾನಪರಿಷತ್ ಸದಸ್ಯರು ಲಾಬಿ ಮುಂದುವರೆಸಿದ್ದಾರೆ. ಹಿರಿಯ ನಾಯಕರಾದ ವೀರಣ್ಣ ಮತ್ತಿಕಟ್ಟಿ, ಮೋಟಮ್ಮ ಅವರು ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.
ವೈಯಕ್ತಿಕವಾಗಿ ನಾವು ಬೇಡಿಕೆ ಇಡುತ್ತಿಲ್ಲ. ಸಚಿವ ಸಂಪುಟದಲ್ಲಿ ಪರಿಷತ್ ನ ಒಬ್ಬರು ಸದಸ್ಯರು ಇರಬೇಕು ಆದ್ದರಿಂದ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಿಗೆ ಸೂಚಿಸಿರುವುದರಿಂದ ಒಬ್ಬರು ಪರಿಷತ್ ಸದಸ್ಯರು ಸಚಿವ ಸ್ಥಾನ ದೊರಕುವುದು ಖಾತ್ರಿಯಾಗಿದೆ.
ದೆಹಲಿಯಲ್ಲಿ ನಾಯಕರು : ಡಿ.ಕೆ.ಶಿವಕುಮಾರ್, ಅಪ್ಪಾಜಿ ನಾಡಗೌಡ, ರಾಜಶೇಖರ್ ಪಾಟೀಲ್ ಮತ್ತು ಮಾಲಕರೆಡ್ಡಿ ಅವರು ನವದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಸಂಪುಟದಲ್ಲಿ ಸ್ಥಾನ ಪಡೆಯಲು ಪ್ರಯತ್ನ ಮುಂದುವರೆಸಿದ್ದಾರೆ. (ಮೇ 29ರಿಂದ ವಿಧಾನಮಂಡಲ ಜಂಟಿ ಅಧಿವೇಶನ)
ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಭೇಟಿಗೆ ಯತ್ನಿಸುತ್ತಿದ್ದರೆ, ಉಳಿದ ನಾಯಕರು ಕರ್ನಾಟಕ ಪ್ರತಿನಿಧಿಸುವ ಸಚಿವರ ಮೂಲಕ ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ. ಆದರೆ, ವಿಧಾನ ಪರಿಷತ್ ಸದಸ್ಯರೊಬ್ಬರು ಸಂಪುಟ ಸೇರುವುದು ಖಾತ್ರಿಯಾಗಿದೆ.












Click it and Unblock the Notifications