ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು : ಸಚಿವರು
ಬುಧವಾರ ಸಂಜೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶರಣ್ ಪಕ್ರಾಶ್ ಪಾಟೀಲ್, ಹಿಂದಿನ ಸರ್ಕಾರ ಏಳು ಹೊಸ ವೈದ್ಯ ಕಾಲೇಜು ಸ್ಥಾಪನೆಗೆ ನಿರ್ಣಯ ಕೈಗೊಂಡಿತ್ತು. ಆದರೆ ನಮ್ಮ ಸರ್ಕಾರ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭವಾದರೆ, ಜಿಲ್ಲೆಯಲ್ಲೊಂದು ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳು ನಿರ್ಮಾಣವಾಗುತ್ತವೆ. ಇದರಿಂದಾಗಿ ಬಡವರು ಖಾಸಗಿ ಆಸ್ಪತ್ರಗೆ ಹೋಗುವುದಿಲ್ಲ. ಕಾಲೇಜು ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚಿಸಿ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.
ಕೇಂದ್ರ ಸರ್ಕಾರ 12 ನೇ ಪಂಚವಾರ್ಷಿಕ ಯೋಜನೆಯಲ್ಲಿ ರಾಜ್ಯಗಳಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುದಾನ ನೀಡಲಿದೆ. ಇದನ್ನು ಬಳಸಿಕೊಂಡು ಹಿಂದುಳಿದ ಜಿಲ್ಲೆಗಳಲ್ಲಿ ಮೊದಲು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಸೇವೆ ಕಡ್ಡಾಯ : ವೈದ್ಯ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ವಿಚಾರಕ್ಕೆ ನಮ್ಮ ಸರ್ಕಾರ ಸಹ ಬದ್ಧವಿದೆ. ಗ್ರಾಮೀಣ ಸೇವೆ ಕಡ್ಡಾಯಗೊಳಿಸುವ ನಿರ್ಣಯ ಜಾರಿಗೊಳಿಸಲು ನಾವು ಸಿದ್ದರಿದ್ದೇವೆ ಎಂದು ಸ್ವತಃ ವೈದ್ಯರಾಗಿರುವ ಸಚಿವ ಪಾಟೀಲ್ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಲ್ಲಿ ವೈದ್ಯರ ಕೊರತೆ ಉಂಟಾಗಲು ಗ್ರಾಮೀಣ ಸೇವೆ ಕಡ್ಡಾಯ ಗೊಳಿಸದಿರುವುದೇ ಕಾರಣವಾಗಿದೆ ಎಂದು ವಿಶ್ಲೇಷಿಸಿದ ಸಚಿವರು, ಗ್ರಾಮೀಣ ವೈದ್ಯ ಸೇವೆ ಕಡ್ಡಾಯ ಮಾಡಿದರೆ, ವೈದ್ಯರ ಕೊರತೆಯೂ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.