ನಾಳೆ ಸಂಪುಟ ವಿಸ್ತರಣೆ, ಎಸ್.ಆರ್.ಪಾಟೀಲ್ ಸೇರ್ಪಡೆ

ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸೂಚಿಸಿದ್ದಾರೆ.
ಹೈಕಮಾಂಡ್ ನಾಯಕರು ಪರಿಷತ್ ನ ಹಿರಿಯ ಸದಸ್ಯ ಎಸ್.ಆರ್.ಪಾಟೀಲ್ ಹೆಸರು ಸೂಚಿಸಿದ್ದಾರೆ. ಶನಿವಾರ ಸಂಪುಟ ವಿಸ್ತರಣೆ ಮಾಡಲಿದ್ದು, ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪಾಟೀಲ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.
ಆಡಳಿತ ಪಕ್ಷದ ನಾಯಕ : ವಿಧಾನ ಪರಿಷತ್ ನ ಒಬ್ಬರು ಸದಸ್ಯರನ್ನು ಸಚಿವರನ್ನಾಗಿ ಮಾಡಿ, ಅವರನ್ನೇ ಪರಿಷತ್ ನ ಆಡಳಿತ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಹೈ ಮಾಂಡ್ ನಾಯಕರು ಸೂಚಿಸಿದ್ದರು ಎಂದು ತಿಳಿದು ಬಂದಿದೆ.
ಆದ್ದರಿಂದ ವಿಧಾನ ಮಂಡಲ ಅಧಿವೇಶನ ಪ್ರಾರಂಭವಾಗುವ ಮೊದಲೇ ಸಂಪುಟ ವಿಸ್ತರಣೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದು, ಪರಿಷತ್ ವಿಪಕ್ಷ ನಾಯಕರಾಗಿದ್ದ ಎಸ್.ಆರ್.ಪಾಟೀಲ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಘೋಷಿಸಿದ್ದಾರೆ. (ಮೇ 29ರಿಂದ ಅಧಿವೇಶನ, ಗುತ್ತೇದಾರ್ ಹಂಗಾಮಿ ಸ್ಪೀಕರ್)
ಮೋಟಮ್ಮಗೆ ನಿರಾಸೆ : ವಿಧಾನಪರಿಷತ್ ಸದಸ್ಯರಾದ ಮೋಟಮ್ಮ, ವೀರಣ್ಣ ಮತ್ತೀಕಟ್ಟಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಎಸ್.ಆರ್.ಪಾಟೀಲ್ ಅವರಿಗೆ ಸಚಿವ ಸ್ಥಾನ ದೊರಕಿದೆ. ಇದರಿಂದ ಉಭಯ ನಾಯಕರಿಗೂ ತೀವ್ರ ನಿರಾಸೆ ಉಂಟಾಗಿದೆ.
ಶಾಸಕರಾದ ಡಿ.ಕೆ.ಶಿವಕುಮಾರ್ ಮತ್ತು ಅನಿಲ್ ಲಾಡ್ ಸಹ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಮೂರನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಯಾರಿಗೆ ಸ್ಥಾನ ದೊರೆಯಲಿದೆ ಎಂದು ಕಾದು ನೋಡಬೇಕು.
ಇಂದು ಸಚಿವ ಸಂಪುಟ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಗುಂಡಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.












Click it and Unblock the Notifications