ಪಿರಿಯಾಪಟ್ಟಣ : ಪ್ರಚಾರ ಅಂತ್ಯ, ಮತದಾನಕ್ಕೆ ಸಿದ್ಧ

ಭಾನುವಾರವೂ ವಿವಿಧ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಎಸ್ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಕ್ಷೇತ್ರದ ವಿವಿಧ ಕಡೆ ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅಂತಿಮ ದಿನ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿ ಆರ್.ಟಿ.ಸತೀಶ್ ಅವರನ್ನು ಗೆಲ್ಲಿಸುವಂತೆ ಕ್ಷೇತ್ರದ ಜನರಿಗೆ ಮನವಿ ಮಾಡಿದರು. ಎಲ್ಲಾ ಪಕ್ಷಗಳಿಗೂ ಚುನಾವಣೆ ಬಹಳ ಪ್ರಮುಖವಾಗಿದೆ.
ಜೆಡಿಎಸ್ ಮತ್ತು ಬಿಜೆಪಿ ವಿಧಾನಸಭೆಯಲ್ಲಿ ಸಮಬಲ ಸಾಧಿಸಿದ್ದು, ಪಿರಿಯಾಪಟ್ಟಣದಲ್ಲಿ ಜಯಗಳಿಸಿ ತಮ್ಮ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ತಂತ್ರ ರೂಪಿಸಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿದ್ದು, ಕ್ಷೇತ್ರವನ್ನು ಕೈವಶ ಮಾಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ.
ಪ್ರಚಾರ ಅಂತ್ಯ : ಭಾನುವಾರ ಸಂಜೆ 5 ಗಂಟೆಗೆ ಬಹಿರಂಗ ಚುನಾವಣಾ ಪ್ರಚಾರ ಕಾರ್ಯ ಅಂತ್ಯಗೊಂಡಿದ್ದು, ಮೇ 28 ಮಂಗಳವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗ ಸಕಲ ರೀತಿಯಲ್ಲಿ ಸಜ್ಜಾಗಿದೆ.
ಮೇ 31ರಂದು ಮತ ಎಣಿಕೆ ನಡೆಯಲಿದ್ದು, ಅಂದು ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಎಲ್ಲಾ ಪಕ್ಷಗಳು ಬಿರುಸಿನಿಂದ ಪ್ರಚಾರ ನಡೆಸಿದ್ದು, ಯಾರಿಗೆ ಜಯದೊರೆಯಲಿದೆ ಎಂದು ಮೇ 31ರಂದು ತಿಳಿಯಲಿದೆ.
ಬಿಜೆಪಿ ಅಭ್ಯರ್ಥಿ ಸಣ್ಣಮೊಗೇಗೌಡರ ನಿಧನದಿಂದಾಗಿ ಕ್ಷೇತ್ರದ ಚುನಾವಣೆಯನ್ನು ಮೇ 5ರಂದು ನಡೆಸಿರಲಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಮಾತ್ರ ನಾಮಪತ್ರ ಸಲ್ಲಿಸಲು ಪುನಃ ಅವಕಾಶ ಕಲ್ಪಿಸಲಾಗಿತ್ತು. ಸಣ್ಣ ಮೊಗೇಗೌಡರ ಸ್ಥಾನಕ್ಕೆ ಪಕ್ಷದಿಂದ ಆರ್.ಟಿ.ಸತೀಶ್ ನಾಮಪತ್ರ ಸಲ್ಲಿಸಿ ಚುನಾವಣೆ ಎದುರಿಸುತ್ತಿದ್ದಾರೆ.
ಕಣದಲ್ಲಿರುವ ಅಭ್ಯರ್ಥಿಗಳು
ಕಾಂಗ್ರೆಸ್ - ಕೆ. ವೆಂಕಟೇಶ್
ಜೆಡಿಎಸ್ - ಕೆ. ಮಹದೇವ್
ಬಿಜೆಪಿಯ - ಆರ್.ಟಿ. ಸತೀಶ್
ಬಿಎಸ್ಆರ್ ಕಾಂಗ್ರೆಸ್ - ಎಚ್.ಡಿ. ಗಣೇಶ್
ಬಿಎಸ್ಪಿ - ಕೃಷ್ಣ












Click it and Unblock the Notifications