ಬಳ್ಳಾರಿ : ದಲಿತ ಮುಖಂಡನ ಬರ್ಬರ ಕೊಲೆ

ಮಂಗಳವಾರ ಸಂಜೆ 6.15ರ ಸುಮಾರಿಗೆ ಚಲಪತಿ(38) ಅನಂತಪುರ ರಸ್ತೆಯ ಪವನ್ ಹೋಟೆಲ್ ಸಮೀಪ ನಡೆದು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಕಬ್ಬಿಣದ ರಾಡ್ ನಿಂದ ಅವರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿದ್ದಾರೆ.
ತೀವ್ರ ರಕ್ತ ಸ್ರಾವದಿಂದ ಕುಸಿದು ಬಿದ್ದ ಚಲಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರು ಸಾವನ್ನಪ್ಪಿದ ನಂತರ ಜೋರಾಗಿ ಕೂಗುತ್ತಾ ಸಾಗಿದ ದುಷ್ಕರ್ಮಿಗಳು ಜನರಲ್ಲಿ ಕೆಲಕಾಲ ಆತಂಕ ಸೃಷ್ಠಿಸಿದ್ದರು. ಕೊಲೆ ನಡೆದ ಸ್ಥಳದಲ್ಲಿ ಎರಡು ರಾಡ್ ಮತ್ತು ಮೊಬೈಲ್ ಫೋನ್ ಗಳು ಪತ್ತೆಯಾಗಿದ್ದು, ಆರೋಪಿಗಳನ್ನು ಹಿಡಿಯಲು ಸಹಾಯಕವಾಗಬಹುದು.
ಜಿಲ್ಲಾಧಿಕಾರಿ ಭೇಟಿ : ಘಟನೆಯ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಹಾಗೂ ಎಸ್ಪಿ ಡಾ.ಚಂದ್ರುಗುಪ್ತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹಳೇ ದ್ವೇಷ ಶಂಕೆ : ದಲಿತ ಮುಖಂಡರಾಗಿದ್ದ ಚಲಪತಿ, ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮತ್ತು ಮಾದಿಗ ದಂಡೋರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕರಾಗಿದ್ದರು. ಹಲವಾರು ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದರು.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.












Click it and Unblock the Notifications