ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ದತ್ತಾತ್ರೇಯ ನಗರದ ಮೂರನೇ ಮುಖ್ಯ ರಸ್ತೆಯ ನಿವಾಸಿ ಹಿರಿಯ ವಕೀಲ ಎ.ಕೆ.ಪಾಟೀಲ್ ಹಾಗೂ ಲತಾ ಪಾಟೀಲ್ ದಂಪತಿ ಪುತ್ರಿ ಅರ್ಚನಾ ಪಾಟೀಲ್ (21) ಆತ್ಮಹತ್ಯೆ ಮಾಡಿಕೊಂಡಿರುವ ವಿಧ್ಯಾರ್ಥಿನಿ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅರ್ಚನಾ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ 5 ನೇ ಸೆಮಿಸ್ಟರ್ ಓದುತ್ತಿದ್ದ ಅರ್ಚನಾ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದಳು. ಇದರಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಆಕೆ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕೊಪ್ಪಳದವರು : ಎ.ಕೆ.ಪಾಟೀಲ್ ಹಾಗೂ ಲತಾ ಪಾಟೀಲ್ ಮೂಲತಃ ಕೊಪ್ಪಳ ಜಿಲ್ಲೆಯವರು. ಮಗಳ ವಿದ್ಯಾಭ್ಯಾಸದ ಕಾರಣದಿಂದಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರು. ಆದರೆ, ಮಗಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬುಧವಾರ ತಂದೆ-ತಾಯಿಯ ಜೊತೆ ಚೆನ್ನಾಗಿ ಮಾತನಾಡಿದ್ದ ಮಗಳು ನಂತರ ಕೋಣೆ ಸೇರಿಕೊಂಡಿದ್ದಳು. ಮನೆಯಿಂದ ಹೊರ ಹೋಗಿದ್ದ ತಂದೆ-ತಾಯಿ ನಂತರ ಬಂದು ನೋಡಿದಾಗ ಅರ್ಚನಾ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದೆ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕಳ್ಳರ ಬಂಧನ : ರಾಮನಗರದ ಜ್ಯುವೆಲ್ಲರಿ ಶಾಪ್ ಮತ್ತು ಎಟಿಎಂನಲ್ಲಿ ಕಳ್ಳತನ ಮಾಡಿ ದುಬೈಗೆ ಹಾರಲು ಹೊಂಚು ಹಾಕಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಎಎಂಸಿ ಕಾಲೇಜಿನ ಬಿಸಿನೆಸ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ಗಿರೀಶ್ ಕುಮಾರ್ ಮತ್ತು ಟಿ.ಜಾನ್ ಕಾಲೇಜಿನ ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಥಿ ನಿತಿನ್ ಪೌಲ್ ಬಂಧಿತರು. ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿದ್ದವು.












Click it and Unblock the Notifications