ಕುಕ್ಕೆ ಸುಬ್ರಮಣ್ಯದಲ್ಲಿ ಡಿ.ಕೆ.ಶಿವಕುಮಾರ್ ಪ್ರತ್ಯಕ್ಷ!

ವಿಧಾನಸಭೆ ಅಧಿವೇಶನ ಪ್ರಾರಂಭವಾಗಿ ಆರು ದಿನಗಳು ಕಳೆದರೂ ಡಿ.ಕೆ.ಶಿವಕುಮಾರ್ ಸದನಕ್ಕೆ ಆಗಮಿಸಿರಲಿಲ್ಲ. ಶಾಸಕರ ಪ್ರಮಾಣ ವಚನ ಮತ್ತು ಸ್ಪೀಕರ್ ಚುನಾವಣೆಯಿಂದ ದೂರವುಳಿದಿದ್ದರು. ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ ಎಂಬ ಸುದ್ದಿ ಹರಡಿತ್ತು.
ಸಚಿವ ಸ್ಥಾನ ಕೈತಪ್ಪಿದ ನಂತರ ಡಿಕೆಶಿ ಮಾಧ್ಯಮಗಳಿಂದ ದೂರವಾಗಿದ್ದರು. ಶನಿವಾರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಕುಟುಬಂದ ಕಾರ್ಯಕ್ರಮಗಳಿಗಾಗಿ ಇಲ್ಲಿಗೆ ಆಗಮಿಸಿದ್ದೇನೆ. ಭಾನುವಾರ ಸಂಜೆಯವರೆಗೂ ಇಲ್ಲೇ ವಾಸ್ತವ್ಯ ಹೂಡಲಿದ್ದೇನೆ ಎಂದು ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ನಾನು ಎಲ್ಲೂ ಕಾಣೆಯಾಗಿಲ್ಲ. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಹಬ್ಬಿಸಿವೆ. ಕ್ಷೇತ್ರದ ಜನರೊಟ್ಟಿಗೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದರು.
ಮೌನವೇ ಉತ್ತರ : ಸೋಮವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಮೌನವಾಗಿದ್ದ ಡಿ.ಕೆ.ಶಿವಕುಮಾರ್, ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಒಟ್ಟಾರೆ ಆರು ದಿನಗಳಿಂದ ಡಿಕೆಶಿ ಎಲ್ಲಿ? ಎಂದು ಹಬ್ಬಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಶಿವಕುಮಾರ್ ಶಾಸಕರಾಗಿ ಎಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾದು ನೋಡಬೇಕು.












Click it and Unblock the Notifications