ಯಡಿಯೂರಪ್ಪ ಬಿಜೆಪಿ ನಾಯಕತ್ವಕ್ಕೆ 'ಕತ್ತಿ'ವರಸೆ ಬಿರುಸು

ಇದಕ್ಕಿಂತ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ ಕತ್ತಿ ಅವರು 16ನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪಕ್ಷವು ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲೇ ಹೋರಾಟ ನಡೆಸಬೇಕು ಎಂದು ಆಶಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲಾಗಿದ್ದು ಬಿಜೆಪಿಗಲ್ಲ; ಪಕ್ಷದ ನಾಯಕರಿಗೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವ ಇಲ್ಲದಿರುವುದೇ ಇದಕ್ಕೆ ಕಾರಣ. ಹಾಗಾಗಿ ರಾಜ್ಯದಲ್ಲಿ ಯಡಿಯೂರಪ್ಪ ನಾಯಕತ್ವದಲ್ಲಿಯೇ ಲೋಕಸಭಾ ಚುನಾವಣೆ ಎದುರಿಸುವುದು ಶ್ರೇಯಸ್ಕರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಾಗಲಕೋಟೆ ನಗರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಪರಿಣಾಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಹೇಳಿದರು.
ಜಮಖಂಡಿ ವರದಿ: ಈ ಮಧ್ಯೆ, ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಜಮಖಂಡಿಯಲ್ಲಿ ಮಾತನಾಡಿ ಬಿಜೆಪಿ ರಾಷ್ಟ್ರೀಯ ನಾಯಕರು ಮನವೊಲಿಸಿದರೆ ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರು ಬಿಜೆಪಿಗೆ ಮರಳಬಹುದು ಎಂದು ಸೂಚ್ಯವಾಗಿ ಹೇಳಿದ್ದಾರೆ.
ಬಿಜೆಪಿಯನ್ನು ಕರ್ನಾಟಕದಲ್ಲಿ ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ಕೀರ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ಸಂಸದ ಅನಂತಕುಮಾರ ರಾಷ್ಟ್ರಮಟ್ಟದಲ್ಲಿ ಬೆಳೆದು ಅಲ್ಲಿಯೇ ಕೆಲಸ ಮಾಡುವುದು ಒಳಿತು. ಅದರಿಂದ ರಾಜ್ಯದ ವಾತಾವರಣ ಕಲುಷಿತವಾಗದು. ಯಡಿಯೂರಪ್ಪ ಹಠಮಾರಿತನ ಕಡಿಮೆ ಮಾಡಿ ನಂಬಿದ ಜನರನ್ನು ಗುರುತಿಸಿ ಅಹಂಭಾವ ಬಿಟ್ಟು ಮುನ್ನಡೆದರೆ ಅವರಿಗೂ ಒಳ್ಳೆಯ ದಾರಿಯಿದೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.












Click it and Unblock the Notifications