ಕರ್ನಾಟಕ : ಎರಡು ದಿನ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಕೇಂದ್ರಬಿಂದು ದಾಖಲಾಗಿದೆ. ಸುಮುದ್ರ ಮಟ್ಟದಿಂದ 7.6 ಕಿ.ಮೀ ಎತ್ತರದವರೆಗೆ ಸುಳಿ ಸೃಷ್ಟಿಯಾಗಿದೆ. ವಾಯುಭಾರ ಕುಸಿತದ ಕೇಂದ್ರ ಬಿಂದು, ಒಡಿಶಾ ಕರಾವಳಿ ಸಮೀಪ ಇರುವುದರಿಂದ ಒಡಿಶಾ ರಾಜ್ಯದಲ್ಲೂ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಒಡಿಶಾ ನಂತರ ಮೋಡಗಳು ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತವೆ. ಆದ್ದರಿಂದ ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವಾಡಿಕೆಗಿಂತ ಹೆಚ್ಚು ಮಳೆ : ಜೂನ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂ.21ರವರೆಗೆ ರಾಜ್ಯದಲ್ಲಿ 125.1 ಮಿ.ಮೀ ಮಳೆ ಬೀಳಬೇಕಿತ್ತು. ಆದರೆ ಈ ಬಾರಿ,160.3 ಮಿ.ಮೀ ನಷ್ಟು ಮಳೆ ಬಿದ್ದಿದೆ.
ಆದ್ದರಿಂದ ವರ್ಷ 28 ಮಿ.ಮೀ ಹೆಚ್ಚು ಮಳೆ ರಾಜ್ಯದಲ್ಲಿ ಸುರಿದಂತಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚಿನ ಮಳೆ ಬಿದ್ದಿದೆ.
ಉತ್ತರ ಒಳನಾಡಿನಲ್ಲಿ ಯಾದಗಿರಿ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿದಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ಮಳೆ ಬಿದ್ದಿದೆ.
ಮಂಗಾರು ದುರ್ಬಲ : ವಾಯುಭಾರ ಕುಸಿತದ ಪರಿಣಾಮ ಶುಕ್ರವಾರದ ಮಟ್ಟಿಗೆ ಮಾತ್ರ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿತ್ತು. ವಾಯುಭಾರ ಕುಸಿತದಿಂದಾಗಿ ಎರಡು ದಿನ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.












Click it and Unblock the Notifications