ಶೀಘ್ರದಲ್ಲೇ ಸಂಪುಟ ವಿಸ್ತರಣೆ, ಲಾಬಿ ಪ್ರಾರಂಭ!

ಸಂಪುಟದ ಸ್ಥಾನಗಳನ್ನು ಭರ್ತಿ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎಂಬುದು ಪಕ್ಷದ ಮೂಲಗಳ ಮಾಹಿತಿ. ಆದ್ದರಿಂದ ಬಜೆಟ್ ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.
ಶನಿವಾರ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮಶ್ವರ್ ಭೇಟಿ ಮಾಡಿದ್ದಾರೆ. ದಿಗ್ವಿಜಯ ಸಿಂಗ್ ರಾಜ್ಯದ ಉಸ್ತುವಾರಿ ವಹಿಸಿಕೊಂಡ ಬಳಿಕ, ಪರಮೇಶ್ವರ್ ಮೊದಲ ಸಲ ಅವರನ್ನು ಭೇಟಿ ಮಾಡಿದ್ದರು.
ಈ ಸಂದರ್ಭದಲ್ಲೂ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ದಿಗ್ವಿಜಯ ಸಿಂಗ್ ಸಹ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಹೈ ಕಮಾಂಡ್ ನಾಯಕರ ಆದೇಶದಿಂದಾಗಿ, ಸಂಪುಟ ವಿಸ್ತರಣೆಯ ಕೆಲಸಗಳು ತೆರೆಮರೆಯಲ್ಲಿ ಪ್ರಾರಂಭವಾಗಿವೆ.
ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಈಗಾಗಲೇ 29 ಜನ ಸಚಿವರಿದ್ದಾರೆ. ಒಟ್ಟು ಐದು ಜನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಅವಕಾಶವಿದೆ. ಸಂಪುಟ ವಿಸ್ತರಣೆಯಾಗುತ್ತದೆ ಎಂಬುದರ ಸುಳಿವು ಅರಿತಿರುವ ಸಚಿವ ಸ್ಥಾನದ ಆಕಾಂಕ್ಷಿಗಳು ಬಿರುಸಿನ ಚಟುವಟಿಕೆ ಪ್ರಾರಂಭಿಸಿದ್ದಾರೆ.
ಯಾರು ಸೇರಬಹುದು : ಹಿರಿಯ ನಾಯಕ ಡಿ.ಕೆ.ಶಿವಕುಮಾರ್, ಎ.ಬಿ.ಮಾಲಕ ರೆಡ್ಡಿ, ರಮೇಶ್ ಕುಮಾರ್, ಮನೋಹರ್ ತಹಶೀಲ್ದಾರ್, ಮೋಟಮ್ಮ, ವೀರಣ್ಣ ಮತ್ತೀಕಟ್ಟಿ ಮುಂತಾದವರ ಹೆಸರು ಕೇಳಿಬರುತ್ತಿದೆ. ಆದರೆ, ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬುದು ನಿಗೂಢವಾಗಿದೆ.
ಬಜೆಟ್ ನಂತರ : ಸಿಎಂ ಸಿದ್ದರಾಮಯ್ಯ ಜುಲೈ 12 ರಂದು ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ. ಆದ್ದರಿಂದ ಬಜೆಟ್ ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.
ಲೋಕಸಭೆ ಚುನಾವಣೆಗಳು ಹತ್ತಿರವಾಗುತ್ತಿರುವುದರಿಂದ ಶಾಸಕರ ಅಸಮಾಧಾನ ತಣಿಸಿ, ಮತಗಳನ್ನು ಪಡೆಯುವ ಉದ್ದೇಶದಿಂದ ಸಂಪುಟ ಪುನಃ ರಚಿಸಲು ಹೈ ಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.












Click it and Unblock the Notifications