ಆರು ಪಥವಾಗಲಿದೆ ಬೆಂಗಳೂರು-ಮೈಸೂರು ಹೆದ್ದಾರಿ?

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಹೆಚ್ಚುತ್ತಿರುವ ವಾಹನಗಳ ಸಂಚಾರ ದಟ್ಟಣೆಯಿಂದಾಗಿ ಈಗಿರುವ ರಸ್ತೆಯನ್ನು 6 ಪಥದ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದರು.
ಮೈಸೂರು-ಬೆಂಗಳೂರು ರಸ್ತೆಯಲ್ಲಿ ಪ್ರತಿದಿನ ಸುಮಾರು 70,000 ವಾಹನಗಳು ಸಂಚರಿಸುತ್ತವೆ ಎಂದು ಅಂದಾಜಿಸಲಾಗಿದೆ. ಈ ರೀತಿಯ ವಾಹನ ದಟ್ಟಣೆಗೆ ನಾಲ್ಕು ಪಥದ ರಸ್ತೆ ಸಾಕಾಗುತ್ತಿಲ್ಲ. ಆದ್ದರಿಂದ ಸರ್ಕಾರ ಆರು ಪಥದ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿಸಲಾಗಿದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆ ಹಿಂದೆಯೂ ಈಗಿರುವ ನಾಲ್ಕು ಪಥದ ರಸ್ತೆಯನ್ನು ವಿಸ್ತರಣೆ ಮಾಡಿ, ಆರು ಪಥಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಸರ್ಕಾರ ಪ್ರಸ್ತಾಪನೆಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್ ಡಿಸಿಎಲ್) ರಸ್ತೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಬಿಜೆಪಿ ಸರ್ಕಾರಕ್ಕೆ ಹಿಂದೆ ಸಲ್ಲಿಸಿತ್ತು. ಆದರೆ, ಹಿಂದಿನ ಸರ್ಕಾರ ಈ ಬಗ್ಗೆ ಗಮನ ಹರಿಸಿರಲಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಪ್ರಸ್ತಾಪ ಮಂಡಿಸಲಾಗುವುದು ಎಂದು ಹೇಳಿದರು.
ಟೋಲ್ ಬಗ್ಗೆ ಜುಲೈನಲ್ಲಿ ನಿರ್ಧಾರ : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವ ಬಗ್ಗೆ ಮುಂದಿನ ತಿಂಗಳು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಜನರಿಗೆ ಹೊರೆಯಾಗದಂತೆ ದರ ಟೋಲ್ ಶುಲ್ಕ ನಿಗದಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಸದ್ಯಕ್ಕೆ ರಾಜ್ಯದಲ್ಲಿ ಸುಮಾರು 15 ರಿಂದ 20 ಸಾವಿರ ಕಿ.ಮೀ. ರಸ್ತೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ದೊಂದಿಗೆ ನಿರ್ಮಿಸಲಾಗಿದೆ. ಈ ರಸ್ತೆಗಳ ನಿರ್ವಹಣೆ ಕಷ್ಟವಾಗುತ್ತಿದೆ. ಆದ್ದರಿಂದ ಟೋಲ್ ಸಂಗ್ರಹಣೆ ಅನಿವಾರ್ಯವಾಗಿದೆ ಎಂದು ಸಚಿವರು ಸಮರ್ಥನೆ ನೀಡಿದರು. (ರಾಜ್ಯ ಹೆದ್ದಾರಿಯಲ್ಲೂ ಟೋಲ್ ಕಟ್ಟಲು ರೆಡಿಯಾಗಿ)












Click it and Unblock the Notifications