ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆಗೆ ಸಿಎಂ ಅಸ್ತು!
ಮುಖ್ಯಮಂತ್ರಿ ಅವರ ಕಚೇರಿಯಿಂದ ಶನಿವಾರ 74 ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸಲು ಆದೇಶ ರವಾನೆಯಾಗಿದೆ. ಆದರೆ, ಆ ಅಧಿಕಾರಿಗಳು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ತಕ್ಷಣ ಭ್ರಷ್ಟಾಚಾರವನ್ನು ತಾವು ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದ್ದರು.140 ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ಅವರ ವಿರುದ್ಧದ ಲೋಕಾಯುಕ್ತ ತನಿಖೆಗೆ ಶೀಘ್ರವೇ ಅನುಮತಿ ನೀಡುವುದಾಗಿ ಹೇಳಿದ್ದರು.
ಕೆಲವು ದಿನಗಳ ಹಿಂದೆ ಲೋಕಾಯುಕ್ತರು 134 ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆಗೆ ಅವಕಾಶ ನೀಡುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಅಧಿಕಾರಿಗಳ ಪಟ್ಟಿ ರವಾನಿಸಿದ್ದರು. ಇದನ್ನು ಪರೀಶಿಲಿಸಿರುವ ಮುಖ್ಯಮಂತ್ರಿಗಳು 74 ಅಧಿಕಾರಿಗಳ ವಿರುದ್ಧದ ತನಿಖೆಗೆ ಅಸ್ತು ಎಂದಿದ್ದಾರೆ.
ಅನುಮತಿ ಅನಿವಾರ್ಯವಾಗಿತ್ತು : ಭ್ರಷ್ಟಾಚಾರದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕೆಲವು ಶಾಸಕರು, ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದರು.
ಆದರೆ, ಇಂತಹ ಅಧಿಕಾರಿಗಳ ವಿರುದ್ಧ ಹೆಚ್ಚುವರಿ ತನಿಖೆ ನಡೆಸಲು ಸರ್ಕಾರದ ಅನುಮತಿ ಬೇಕಾಗಿತ್ತು. ಮುಖ್ಯಮಂತ್ರಿಗಳಿಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಟ್ಟಿ ಸಲ್ಲಿಸಿ, ಲೋಕಾಯುಕ್ತ ಅಧಿಕಾರಿಗಳು ಕಾದು ಕುಳಿತಿದ್ದರು.
ಸಿಎಂ ಸಿದ್ದರಾಮಯ್ಯ ಕೆಲವೇ ದಿನಗಳಲ್ಲಿ ವಿಚಾರಣೆಗೆ ಅನುಮತಿ ನೀಡುವುದಾಗಿ ಹೇಳಿಕೆ ನೀಡಿದ್ದರು. ಅದನ್ನು ಕಾರ್ಯರೂಪಕ್ಕೆ ತಂದಿರುವ ಅವರು 74 ಅಧಿಕಾರಿಗಳ ವಿರುದ್ಧದ ತನಿಖೆಗೆ ಅನುಮತಿ ನೀಡಿದ್ದಾರೆ. (ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಸಿಎಂ)
ಶೀಘ್ರ ವಿಚಾರಣೆ ಆರಂಭ : ಸರ್ಕಾರದ ಅನುಮತಿ ದೊರೆತಿದ್ದರಿಂದ ಸರ್ಕಾರಿ ಅಧಿಕಾರಿಗಳ ವಿಚಾರಣೆ ನಡೆಸಲು ಲೋಕಾಯುಕ್ತರಿಗೆ ಇದ್ದ ಅಡಚಣೆ ದೂರವಾಗಿದೆ. ಶೀಘ್ರವೇ ಅಧಿಕಾರಿಗಳ ವಿಚಾರಣೆ ಪ್ರಾರಂಭಿಸಿ, ಲೋಕಾಯುಕ್ತ ಪೊಲೀಸರು ಚಾರ್ಚ್ ಶೀಟ್ ಸಲ್ಲಿಸಲಿದ್ದಾರೆ.