ಭದ್ರಾವತಿ : ರಸ್ತೆ ನಿರ್ಮಾಣ ಕಿರಿಕ್, ಮೂವರ ಕೊಲೆ
ಕೊಲೆಯಾದವರನ್ನು ಭದ್ರಾಪುರ ಗ್ರಾಮದ ನಿವಾಸಿಗಳಾದ ಚಂದ್ರು (35), ಪ್ರಕಾಶ್ (32) ಮತ್ತು ರಮೇಶ್ (32) ಎಂದು ಗುರುತಿಸಲಾಗಿದೆ. ನೆರೆಹೊರೆಯವರು ಇವರನ್ನು ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಹೊಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಘಟನೆ ಏನು : ಭದ್ರಾಪುರ ಗ್ರಾಮದಲ್ಲಿ ರಸ್ತೆ ನಿರ್ಮಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ನಡುವೆ ಸೋಮವಾರ ಜಗಳ ಪ್ರಾರಂಭವಾಗಿದೆ. ಗ್ರಾಮದ ಪ್ರತಿ ಮನೆಯವರು ರಸ್ತೆಗೆ ಜಾಗ ಬಿಟ್ಟುಕೊಡಬೇಕೆಂದು ಗ್ರಾಮಸ್ಥರು ತೀರ್ಮಾನಿಸಿದ್ದರು. ಆದರೆ, ಮೃತ ಚಂದ್ರು, ಪ್ರಕಾಶ್ ಮತ್ತು ರಮೇಶ್ ಕುಟುಂಬದವರು ಜಮೀನು ನೀಡಲು ನಿರಾಕರಿಸಿದ್ದಾರೆ.
ಇದರಿಂದ ಕುಟುಂಬದವರು ಮತ್ತು ಗ್ರಾಮಸ್ಥರ ನಡುವೆ ಜಗಳ ಪ್ರಾರಂಭವಾಗಿದೆ. ಜಗಳ ವಿಕೋಪಕ್ಕೆ ಹೋದಾಗ ಗ್ರಾಮದ ಕೆಲವರು ಮೂವರನ್ನು ಕೊಂದು ಪರಾರಿಯಾಗಿದ್ದಾರೆ. ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮತ್ತೆ ಘರ್ಷಣೆ ಸಂಭವಿಸುವ ಸಾಧ್ಯತೆ ಇದೆ.
ಗ್ರಾಮಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸ್ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದ್ದಾರೆ.