ಮೈಸೂರು, ಉಡುಪಿ, ತುಮಕೂರು ಜಿಲ್ಲಾ ಸುದ್ದಿಗಳು

ವಿಧಾನಸೌಧದ ಮೂರನೇ ಮಹಡಿಯ ಸಚಿವ ಆರ್.ವಿ.ದೇಶಪಾಂಡೆ ಅವರ ಕಚೇರಿಯ ಎದುರು ಆನಂದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಮೈಸೂರು : ಲಾರಿ ಮಾಲೀಕರ ಮುಷ್ಕರದ ಹಿನ್ನಲೆಯಲ್ಲಿ ಮಂಗಳವಾರದಿಂದ ಕಟ್ಟಡ ನಿರ್ಮಾಣ ಕಾಮಗಾರಿ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಜಲ್ಲಿಕಲ್ಲು, ಇಟ್ಟಿಗೆ, ಕಬ್ಬಿಣ ಮುಂತಾದ ಸಾಗಾಣಿಕೆಗಳನ್ನು ಸ್ಥಗಿತಗೊಳಿಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮಗಪ್ಪ ಮೈಸೂರಿನಲ್ಲಿ ಹೇಳಿದ್ದಾರೆ.
ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ನ್ಯಾಯಾಂಗ ಬಂಧನವನ್ನು 15 ದಿನಗಳ ಕಾಲ ವಿಸ್ತರಿಸಿ ಉಡುಪಿಯ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ತುಮಕೂರು : ದುಷ್ಕರ್ಮಿಗಳ ತಂಡ ತಿಪಟೂರು ತಾಲೂಕಿನ ಹಾಲ್ಕುರಿಕೆ ಸರ್ಕಾರಿ ಶಾಲೆಗೆ ಸೋಮವಾರ ಬೆಳಗ್ಗೆ ಬೆಂಕಿ ಹಚ್ಚಿದೆ. ಶಾಲೆಯಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ. ಶಾಲೆಯ ಕಂಪ್ಯೂಟರ್, ಪಿಠೋಪಕರಣಗಳು ಬೆಂಕಿಗೆ ಆಹುತಿಯಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಹಾದಾಯಿ ನದಿ ತುಂಬಿ ಹರಿಯುತ್ತಿರುವುದರಿಂದ ಬೆಳಗಾವಿ ಜಿಲ್ಲೆಯ ಮೂರು ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಖಾನಾಪುರ ತಾಲೂಕಿನ ಗವಳಿ, ಕೊಂಗಳಿ ಮತ್ತು ವಾಸ್ಟೊಲಿ ಗ್ರಾಮಗಳು ಹೊರ ಜಗತ್ತಿನ ಸಂಪರ್ಕ ಕಡಿದು ಕೊಂಡಿವೆ. ಗ್ರಾಮದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆತರುವ ಕಾರ್ಯಾಚರಣೆ ಪ್ರಾರಂಭವಾಗಿದೆ.
ಹುಬ್ಬಳ್ಳಿ : ಚೀಟಿ ಹಣ ವಾಪಸ್ ಕೇಳಿದ ಮಹಿಳೆಯನ್ನು ಬೆಂಕಿಹಚ್ಚಿಕೊಂದ ಘಟನೆ ಹುಬ್ಬಳ್ಳಿ ನಗರದ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸೀಮಾ ಎಂಬ ಗೃಹಿಣಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಸೀಮಾ ಸುಜಾತ ಎಂಬುವವರ ಬಳಿ ಚೀಟಿ ಕಟ್ಟಿದ್ದರು. ಅದರ ಹಣವನ್ನು ವಾಪಸ್ ಕೇಳಿದ್ದಕ್ಕೆ ಅವರನ್ನು ಕೊಲೆ ಮಾಡಿ, ಸುಟ್ಟು ಹಾಕಲಾಗಿದೆ ಎಂದು ಸೀಮಾ ಸಂಬಂಧಿಕರು ದೂರಿದ್ದಾರೆ.












Click it and Unblock the Notifications