ಒಂದಾಗಲು ಬಿಎಸ್ವೈ ಆಹ್ವಾನ, ಜೆಡಿಎಸ್ ನಕಾರ!

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ದೇಶ ಕವಲು ದಾರಿಯಲ್ಲಿದೆ. ನಾವು ನಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ಲೋಕಸಭಾ ಚುನಾವಣೆ ಎದುರಿಸಬೇಕು. ಆದ್ದರಿಂದ ಎಲ್ಲಾ ವಿರೋಧ ಪಕ್ಷಗಳು ಒಂದಾಗೋಣ ಎಂದು ಕರೆ ನೀಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಜೆಪಿ ಸೇರಿದಂತೆ ಬಿಜೆಪಿ, ಜೆಡಿಎಸ್ ಹಾಗೂ ಬಿಎಎಸ್ಆರ್ ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಬೇಕು. ಇದರಿಂದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿ ಕುಗ್ಗಿಸಬಹುದು ಎಂದು ಯಡಿಯೂರಪ್ಪ ವಿಶ್ಲೇಷಿಸಿ, ಹೊಂದಾಣಿಕೆಯ ಪ್ರಸ್ತಾಪವನ್ನು ಮುಂದಿಟ್ಟರು.
ಜೆಡಿಎಸ್ ನಕಾರ : ಬಿ.ಎಸ್.ಯಯಡಿಯೂರಪ್ಪ ಅವರ ಪ್ರಸ್ತಾವನೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಕೆಜೆಪಿಯೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ನಾಯಕ ಎಚ್.ಡಿ.ದೇವೇಗೌಡ ಸಹ ಸ್ಪಷ್ಟಪಡಿಸಿದ್ದಾರೆ.
ಯಾವುದೇ ಮೈತ್ರಿ ಇಲ್ಲ : ಲೋಕಸಭೆ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆಗಾಗಿ ಜೆಡಿಎಸ್, ಬಿಜೆಪಿ ಅಥವ ಅದು ರಚಿಸುವ ಮೈತ್ರಿಕೂಟದ ಜತೆ ಕೈಜೋಡಿಸುವುದಿಲ್ಲ. ಅದರ ಅನಿವಾರ್ಯತೆಯೂ ಪಕ್ಷಕ್ಕಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಡ್ಡಿ ಮುರಿದಂತೆ ಹೇಳಿದ್ದಾರೆ.
ತೃತೀಯ ರಂಗ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿರಬೇಕು. ಆದ್ದರಿಂದ ಬಿಜೆಪಿಯೊಂದಿಗೆ ಕೈ ಜೋಡಿಸುವ ಪಕ್ಷಗಳ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಬಿಎಸ್ವೈ ಸಮರ್ಥನೆ : ಮಂಗಳವಾರ ಸದನದಲ್ಲಿ ನಾವು ಒಗ್ಗಟ್ಟಾಗುತ್ತೇವೆ. ತಪ್ಪಿನ ಅರಿವಾಗಿದೆ ಎಂದು ಹೇಳಿ ಕುತೂಹಲ ಮೂಡಿಸಿದ್ದ ಬಿ.ಎಸ್.ಯಡಿಯೂರಪ್ಪ ಬುಧವಾರ ಸದನದಲ್ಲಿ ತಮ್ಮ ಮಾತಿಗೆ ಸಮರ್ಥನೆ ನೀಡಿದ್ದಾರೆ. (ಬಿಜೆಪಿ ಸೇರುವ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ?)
"ನಾನು ಯಾವುದೇ ಸ್ಥಾನದ ಮೇಲೆ ಕಣ್ಣಿಟ್ಟಿಲ್ಲ. ದೇಶದ ಹಿತದೃಷ್ಟಿಯಿಂದ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲಾ ಪಕ್ಷಗಳು ಒಂದಾಗಿ ಲೋಕಸಭಾ ಚುನಾವಣೆ ಎದುರಿಸಬೇಕು ಎಂದು ಕರೆ ನೀಡಿದ್ದು". ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟು ಮಾಡಲು ವಿವಿಧ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ. ಯಾವ ಪಕ್ಷಗಳು ಯಾರೊಂದಿಗೆ ಕೈ ಜೋಡಿಸುತ್ತೆವೆ ಎಂದು ಕಾದು ನೋಡಬೇಕು.












Click it and Unblock the Notifications