ಬೆಳಗಾವಿ : ಚಿತ್ರಾನ್ನ ತಿಂದು 25 ಮಕ್ಕಳು ಅಸ್ವಸ್ಥ

ಅಥಣಿ ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ, ಶುಕ್ರವಾರ ಬೆಳಗ್ಗೆ ಉಪಹಾರಕ್ಕಾಗಿ ಚಿತ್ರಾನ್ನ ನೀಡಲಾಗಿತ್ತು. ಇದನ್ನು ತಿಂದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಪ್ರಾರಂಭಿಸಿದರು. ತಕ್ಷಣ ಅವರನ್ನು ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಮಕ್ಕಳ ಜೀವಕ್ಕೂ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹತ್ತಿರದ ಆಸ್ಪತ್ರೆಗಳ ತಜ್ಞ ವೈದ್ಯರನ್ನು ಅಥಣಿ ಸರ್ಕಾರಿ ಆಸ್ಪತ್ರೆಗೆ ಕರೆಸಿಕೊಳ್ಳಲಾಗಿದ್ದು, ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕ್ಕೋಡಿ ಜಿಲ್ಲಾ ಆರೋಗ್ಯಾಧಿಕಾರಿ ವಿ.ಬಿ.ಕುಲಕರ್ಣಿ, 25 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಉಪಹಾರಕ್ಕೆ ಬಳಸಿದ ಅಕ್ಕಿಯಿಂದಾಗಿ ಘಟನೆ ಸಂಭವಿಸಿರಬಹುದು. ಚಿತ್ರಾನ್ನದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಎಚ್ಚೆತ್ತ ಕೇಂದ್ರ ಸರ್ಕಾರ : ಬಿಹಾರದ ಸರನ್ ಜಿಲ್ಲೆಯಲ್ಲಿ ಬಿಸಿಯೂಟ ಸೇವಿಸಿ 23 ಮಕ್ಕಳು ಮೃತಪಟ್ಟ ಘಟನೆ ನಡೆದ ನಂತರ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಬಿಸಿಯೂಟ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಲು ಸಮಿತಿ ರಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತು ಅಂತಿಮ ನಿರ್ಧಾರ ಶೀಘ್ರದಲ್ಲೇ ಹೊರ ಬೀಳಲಿದೆ.












Click it and Unblock the Notifications