ಕಲಿಸುವುದು ಎಂದರೆ ನನಗೆ ಇಷ್ಟ : ಅಬ್ದುಲ್ ಕಲಾಂ
ಬೆಂಗಳೂರು, ಜು.20 : "ಶಿಕ್ಷಣ ಭಾರತದ ಗ್ರಾಮೀಣ ಪ್ರದೇಶಗಳನ್ನು ತಲುಪಬೇಕು. ದೇಶದ ಪ್ರತಿ ವಿದ್ಯಾರ್ಥಿಯೂ ತನ್ನ ಗುರಿಯನ್ನು ಸಾಧಿಸುವಂತಾಗಬೇಕು" ಎಂದು ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಕರೆ ನೀಡಿದ್ದಾರೆ.
ಪ್ರತಿ ಮಗುವಿಗೂ ಗುಣಾತ್ಮಕ ಶಿಕ್ಷಣ ಎಂಬ ಶೀರ್ಷಿಕೆಯಡಿ ಕೆಲಸ ಮಾಡುತ್ತಿರುವ ಶಿಕ್ಷಣ ಫೌಂಡೇಶನ್ ಸಂಸ್ಥೆಯ, ದಶಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ ಉದ್ಘಾಟಿಸಿ ಅಬ್ದುಲ್ ಕಲಾಂ ಮಾತನಾಡಿದರು.
ತಮ್ಮ ಭಾಷಣದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಮಹತ್ವ ನೀಡಿದ ಕಲಾಂ ಯುವಕರು ಉತ್ತಮ ಶಿಕ್ಷಣ ಪಡೆದು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.
"I love teaching and I love to be a teacher" ಎಂದು ಹೇಳಿದ ಅಬ್ದುಲ್ ಕಲಾಂ, ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಶ್ರಮಿಸುತ್ತಿರುವ ಶಿಕ್ಷಣ ಫೌಂಡೇಶನ್ ನಂತಹ ಸಂಸ್ಥೆಗಳ ಕಾರ್ಯಗಳನ್ನು ಶ್ಲಾಘಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣ ತಲುಪಬೇಕು ಎಂಬುದು ಸರ್ಕಾರದ ಆಶಯವೂ ಹೌದು. ಇಂತಹ ಕೆಲಸ ಮಾಡುತ್ತಿರುವ ಸಂಸ್ಥೆಗಳಿಗೆ ಸರ್ಕಾರ ಬೆಂಬಲ ನೀಡಲಿದೆ ಎಂದು ಹೇಳಿದರು.
ಶಿಕ್ಷಣ ಫೌಂಡೇಶನ್ : ಪ್ರತಿ ಮಗುವಿಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕು ಎಂದು ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಫೌಂಡೇಶನ್ ಈ ವರ್ಷ 12 ಶಿಕ್ಷಕರಿಗೆ ಗುರು ಪುರಸ್ಕಾರ ನೀಡಿ ಗೌರವಿಸಿತು. ಮೂವರು ಶಿಕ್ಷಕರಿಗೆ ಅಮೆರಿಕಾ ಪ್ರವಾಸ ಮಾಡುವ ಅವಕಾಶವನ್ನು ಕಲ್ಪಿಸಿತು.












Click it and Unblock the Notifications