ಗುರು ಪೌರ್ಣಿಮೆಯಂದು ಅಪಘಾತಕ್ಕೆ 18 ಬಲಿ
ಬಿಜಾಪುರ, ಜು.18 : ಕ್ರುಸರ್ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಿಂದಾಗಿ 18 ಜನರು ಸಾವನ್ನಪ್ಪಿರುವ ದಾರುಣ ಘಟನೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಸೋಮವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಮಹಾರಾಷ್ಟ್ರದ ಸಾಂಗ್ಲಿಯ ಜಿತ್ ತಾಲೂಕಿನವರು ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಗುರುಪೌರ್ಣಿಮೆ ಅಂಗವಾಗಿ ಕ್ರುಸರ್ ನಲ್ಲಿ ಗಾಣಿಗಾಪುರದ ದತ್ತಾತ್ರೇಯ ದೇವರ ದರ್ಶನಕ್ಕೆ ಮಹಾರಾಷ್ಟ್ರದಿಂದ ಯಾತ್ರಾರ್ಥಿಗಳು ಆಗಮಿಸಿದ್ದರು. ದೇವಾಲಯದಿಂದ ಹಿಂದಿರುಗಬೇಕಾದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಗೆ ಕ್ರುಸರ್ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಸ್ಥಳದಲ್ಲೇ 15 ಮಂದಿ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದ್ದು, ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರುಸರ್ ಚಾಲಕನ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಟ್ರಾಫಿಕ್ ಜಾಮ್ : ಅಪಘಾತದಿಂದಾಗಿ ಬಿಜಾಪುರ ಸಿಂದಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರು ತಾಸಿಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೃತ ದೇಹಗಳನ್ನು ತೆರವುಗೊಳಿಸಿ, ಪೊಲೀಸರು ಪುನಃ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಶವಗಳನ್ನು ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮೃತಪಟ್ಟವರಲ್ಲಿ ಬಹುತೇಕರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಚಾಲಕ ಅಪಘಾತದ ನಂತರ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ.












Click it and Unblock the Notifications