ಡೆಂಗ್ಯೂದಿಂದ ರಾಜ್ಯದಲ್ಲಿ 9 ಸಾವು : ಸಚಿವರು

ಸೋಮವಾರ ಬಿಜೆಪಿಯ ಜಗದೀಶ್ ಶೆಟ್ಟರ್ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಉತ್ತರ ನೀಡಿದ ಸಚಿವರು. ರಾಜ್ಯದಲ್ಲಿ ಸಾಕಷ್ಟು ಮುನ್ನೆಚ್ಚರಿಗೆಗಳನ್ನು ತೆಗೆದುಕೊಳ್ಳಲಾಗಿದ್ದು, ಡೆಂಗ್ಯೂ ಹರಡದಂತೆ ಎಚ್ಚರ ವಹಿಸಲಾಗಿದೆ ಎಂದರು.
ರಾಜ್ಯದಲ್ಲಿ ಇದುವರೆಗೆ 11,524 ಶಂಕಿತ ಡೆಂಗ್ಯೂ ಪ್ರಕರಣಗಳು ಕಂಡುಬಂದಿದ್ದು, 7,633 ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ. 2,713 ಪ್ರಕರಣಗಳು ಡೆಂಗ್ಯೂ ಎಂಬುದು ದೃಢಪಟ್ಟಿದೆ. ಈ ಪೈಕಿ 9 ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಿದರು.
ಡೆಂಗ್ಯೂ ಸೋಂಕು ಪತ್ತೆ ಹಚ್ಚಲು ಈಗಾಗಲೇ ಜಿಲ್ಲೆಗಳಲ್ಲಿ 21 ಪ್ರಯೋಗಾಲಯ ನಿರ್ಮಿಸಲಾಗಿದೆ. ಅಲ್ಲದೆ, ಪ್ರತಿ ಜಿಲ್ಲೆಗಳಲ್ಲಿಯೂ ಡೆಂಗ್ಯೂ ಡೆತ್ ಆಡಿಟ್ ಕಮಿಟಿ ರಚಿಸಲಾಗಿದೆ. ಈ ಸಮಿತಿ ಡೆಂಗ್ಯೂ ಸೋಂಕಿನಿಂದ ಯಾರಾದರೂ ಮೃತಪಟ್ಟರೆ, ವಿವರಗಳನ್ನು ದಾಖಲಿಸಿಕೊಳ್ಳುತ್ತದೆ ಎಂದು ತಿಳಿಸಿದರು.
ಟಾಸ್ಕ್ ಪೋರ್ಸ್ ರಚನೆ : ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಸಿಇಓಗಳಿಗೆ ನಿರ್ದೇಶನ ನೀಡಲಾಗಿದೆ. ಬಿಬಿಎಂಪಿಯಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚಿಸಲಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ನಿಯಂತ್ರಿಸಲು ಈ ಸಮಿತಿ ಕೆಲಸ ಮಾಡುತ್ತಿದೆ ಎಂದರು.
ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ : ನೆಲಮಂಗಲ ತಾಲೂಕಿನ ಮಾದನಾಯಕನಹಳ್ಳಿಯ ಸಂಜೀವಿನಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಡೆಂಗ್ಯೂ ಜ್ವರದಿಂದಾಗಿ ಹೇಮಂತ್ ಕುಮಾರ್ (14) ಎಂಬ ಬಾಲಕ ಮೃತಪಟ್ಟಿದ್ದಾನೆ. ಕಳೆದ ನಾಲ್ಕು ದಿನಗಳಿಂದ ಬಾಲಕ ಜ್ವರದಿಂದ ಬಳಲುತ್ತಿದ್ದ ಎಂದು ಸಂಜೀವಿನಿ ಆಸ್ಪತ್ರೆಯ ವೈದ್ಯರು ಹೇಳಿದ್ದು, ಡೆಂಗ್ಯೂದಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ದೃಢ ಪಡಿಸಿದ್ದಾರೆ.












Click it and Unblock the Notifications