ಡಿಕೆ ಸುರೇಶ್, ಅನಿತಾ ಕುಮಾರಸ್ವಾಮಿ ಸ್ಪರ್ಧೆ ಖಚಿತ
ಬೆಂಗಳೂರು, ಆಗಸ್ಟ್ 2: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಹಾಗೂ ಜೆಡಿಎಸ್ ಪಕ್ಷದಿಂದ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಖಚಿತ ಪಟ್ಟಿದೆ.
ತಮ್ಮ ಪತಿ, ರಾಮನಗರ ಶಾಸಕ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರೆವಾದ ಸ್ಥಾನಕ್ಕೆ ಸ್ಪರ್ಧಿಸಲು ಅನಿತಾ ಕುಮಾರಸ್ವಾಮಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಡಿಕೆ ಸುರೇಶ್ ಸಹ ನಾಳೆಯೇ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ. ಆಗಸ್ಟ್ 21 ರಂದು ಉಪಚುನಾವಣೆ ನಡೆಯಲಿದೆ.
ಇನ್ನು ತಮ್ಮ ಸಹೋದರ ಕಣ್ಣಕ್ಕಿಳಿಯುವುದು ಖಚಿತವಾಗುತ್ತಿದ್ದಂತೆ ಕ್ರಿಯಾಶೀಲರಾಗಿರುವ ಡಿಕೆ ಶಿವಕುಮಾರ್ ಅವರು, ಇಂದು ಮಧ್ಯಾಹ್ನ ಆ ಭಾಗದ ಮತ್ತೊಬ್ಬ ಪ್ರಭಾವಿ ನಾಯಕ, ಮಾಜಿ ಸಚಿವ ಸಿಪಿ ಯೋಗೇಶ್ವರ್ ಅವರನ್ನು ರಹಸ್ಯ ಸ್ಥಳದಲ್ಲಿ ಭೇಟಿ ಮಾಡಿ, ಬೆಂಬಲ ಕೋರಿದ್ದಾರೆ ಎಂದು ತಿಳಿದುಬಂದಿದೆ.

ಬೆಂ. ಗ್ರಾಮಾಂತರ:
ಪ್ರಧಾನಿ ಹೆಚ್ ಡಿ ದೇವೇಗೌಡರ ಸೊಸೆ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಧರ್ಮಪತ್ನಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರೊಡನೆ ಶನಿವಾರ ಬೆಳಗ್ಗೆ 11 ಗಂಟೆಗೆ ರಾಮನಗರ ಜಿಲ್ಲಾ ಚುನಾವಣಾಧಿಕಾರಿಗಲಲ್ಲಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ ರಾಜು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಅನೇಕರ ಹೆಸರುಗಳು ಕೇಳಿಬರುತ್ತಿದ್ದು, ಇಂದು ಅಂತಿಮವಾಗಿ ಪಕ್ಷ ಮತ್ತು ಕಾರ್ಯಕರ್ತರ ಅಂತಿಮ ನಿರ್ಧಾರದಂತೆ ಅನಿತಾಕುಮಾರಸ್ವಾಮಿ ಅವರನ್ನೆ ಚಿಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಬೇಕೆಂದು ತೀರ್ಮಾನಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಮುನ್ನ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಅನಿತಾಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಅರಣ್ಯ ಸಚಿವ ಸಿ ಪಿ ಯೋಗೀಶ್ವರ ಅವರ ವಿರುದ್ಧ ಸೋಲನ್ನು ಕಂಡಿದ್ದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರದ ಶಾಸಕ ಡಿಕೆ ಶಿವಕುಮಾರ್ ಅವರ ದ್ವಿತೀಯ ಸಹೋದರ ಡಿಕೆ ಸುರೇಶ್ ಅವರು ಪಕ್ಷದ ಅಪಾರ ಸಂಖ್ಯೆಯ ಕಾರ್ಯಕರ್ತರೊಡನೆ ನಾಳೆ ಶನಿವಾರ ಬೆಳಗ್ಗೆ ಗಂಟೆಗೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮರಿದೇವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ ನಾಗರಾಜು ರಾಮನಗರ ಜಿಲ್ಲಾ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಗರ ಬಿಜೆಪಿ ಘಟಕದ ಅಧ್ಯಕ್ಷ ಜಿವಿ ಪದ್ಮನಾಭ ತಿಳಿಸಿದ್ದಾರೆ.
ಮಂಡ್ಯದಲ್ಲಿ ಯಾರು ಯಾರು?:
ಇನ್ನು, ಎನ್ ಚಲುವರಾಯಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಸಿಎಸ್ ಪುಟ್ಟರಾಜು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಜಿಲ್ಲಾ ಮುಖಂಡರ ಸಭೆ ನಡೆಸಿ ಒಮ್ಮತದ ಅಭ್ಯರ್ಥಿಯಾಗಿ ಪುಟ್ಟರಾಜು ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ.
ಆದರೆ ಕಾಂಗ್ರೆಸ್ ವತಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಶಿವರಾಮೇಗೌಡ ಅವರನ್ನು ಕಣಕ್ಕಿಳಿಯಲು ಶತಪ್ರಯತ್ನ ನಡೆಸಿದ್ದು ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ವರಿಷ್ಠರಿಂದ ಸ್ಪಷ್ಟ ಸಂದೇಶವನ್ನು ರಾಜ್ಯ ನಾಯಕರು ನಿರೀಕ್ಷಿಸುತ್ತಿದ್ದಾರೆ.












Click it and Unblock the Notifications